
ಶಿವಮೊಗ್ಗ : ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಬೆದರಿಕೆ ಹಾಕಿ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿದ್ದ ಫ್ಲೆಕ್ಸ್ ಸಾರ್ವಜನಿಕರ ದೂರಿನ ಮೇರೆಗೆ ತೆರವುಗೊಳಿಸಿದ್ದ ಆಯುಕ್ತರಿಗೆ ಕರೆ ಮಾಡಿ ರಾಜೀವ ಗೌಡ ಅವಾಚ್ಯವಾಗಿ ನಿಂದನೆ ಮಾಡಿದ್ದಾರೆ. ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ತರುವಂತಹ ಘಟನೆ, ಸರ್ಕಾರ ಕೆಲಸಕ್ಕೆ ಅಡ್ಡಿ, ಶಾಂತಿ ಭಂಗಕ್ಕೆ ಪ್ರಚೋದನೆ ಮತ್ತು ಬೆದರಿಕೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಗಲಭೆಗೆ ಕುಮ್ಮಕ್ಕು ನೀಡುತ್ತಿರುವುದಕ್ಕೆ ಎಫ್ಐಆರ್ ದಾಖಲಿಸಲಾಗಿದೆ ಎಂದರು.
ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಇಂತಹ ಸ್ಥಿತಿ ಬಂದರೆ ಅವರ ಪರಿಸ್ಥಿತಿ ಏನು ಎಂದು ಚಿಂತಿಸುವಂತಾಗಿದೆ. ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತಿದೆ. ಮಹಿಳೆಯರು ಪ್ರಾಮಾಣಿಕವಾಗಿ ಮತ್ತು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ರಾಜೀವ್ಗೌಡ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್. ಗೋವಿಂದ, ಪ್ರಧಾನ ಕಾರ್ಯದರ್ಶಿ ಮೋಹನ್ಕುಮಾರ್, ಪದಾಧಿಕಾರಿಗಳಾದ ವಸಂತಕುಮಾರ್, ಮಂಜುನಾಥ್, ಬಾಲಯ್ಯ, ಲೋಹಿತ್ ಯಾದವ್, ಮಧು, ಮಾರುತಿ, ಎಸ್.ಆರ್.ನಾಗೇಶ್, ಸುನಿಲ್ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.