ಶಿಕಾರಿಪುರ: ಸರ್ಕಾರಿ ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳು ಗುರುವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
‘ಕಾಲೇಜು ಆರಂಭವಾಗಿ ಎರಡು ತಿಂಗಳು ಆಗಿದ್ದು, ಈವರೆಗೂ ಅತಿಥಿ ಉಪನ್ಯಾಸಕರನ್ನು ನೇಮಿಸದ ಕಾರಣ ಪಾಠ ಪೂರ್ಣಗೊಂಡಿಲ್ಲ. ಸೆ. 22ರಿಂದ ಆಂತರಿಕ ಸೆಮಿಸ್ಟರ್ ಪರೀಕ್ಷೆ ಇದ್ದು, ನಿಗದಿಪಡಿಸಿರುವ ಪಾಠಗಳೇ ಆಗಿಲ್ಲ. ಆದ್ದರಿಂದ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಅದಕ್ಕಾಗಿ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಕಾಲೇಜಿನಲ್ಲಿ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರೆಲ್ಲರ ಭವಿಷ್ಯ ಕತ್ತಲೆಯಲ್ಲಿ ಮುಳುಗುವುದಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ಪ್ರತಿಭಟನನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಸ್ತೆಯಲ್ಲೇ ಧರಣಿ ನಡೆಸಿದ್ದರಿಂದ ಎರಡು ಗಂಟೆಗೂ ಹೆಚ್ಚುಕಾಲ ಸಂಚಾರ ವ್ಯತ್ಯಯವಾಗಿತ್ತು.
ಎಬಿವಿಪಿ ಸಂಘಟನೆಯ ದರ್ಶನ್, ರಂಗನಾಥ, ಪವನ್, ಆಕಾಶ್, ಚೇತು, ರವಿ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.