ADVERTISEMENT

ಖಾಸಗಿ ಬಸ್ ಪ್ರಯಾಣ ದರ ಶೇ 25ರಷ್ಟು ಹೆಚ್ಚಳ: ಕೆ.ಬಿ.ಶಿವಕುಮಾರ್

ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 13:00 IST
Last Updated 29 ಜುಲೈ 2021, 13:00 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.   

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ 25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿಯೂ ಪರಿಷ್ಕೃತ ದರ ಶೀಘ್ರ ಘೋಷಿಸಲಾಗುವುದು ಎಂದರು.

ADVERTISEMENT

ಖಾಸಗಿ ಮತ್ತು ಕೆಎಸ್‍ಆರ್‌ಸಿಟಿ ಬಸ್‍ಗಳ ನಡುವೆ ಪೈಪೋಟಿ ತಪ್ಪಿಸಲು ಎರಡು ಕಡೆ ಸಹಕಾರ ಅಗತ್ಯ. ಸರ್ಕಾರಿ ಬಸ್‌ ನಿಲ್ದಾಣದ ಒಳಗೆ ಖಾಸಗಿ ಬಸ್‌ಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು, ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ಸೂಚಿಸಿದರು.

ಆಟೊರಿಕ್ಷಾ ಪ್ರಯಾಣದ ಕನಿಷ್ಠ ದರವನ್ನು ₹ 40ಕ್ಕೆ ಪರಿಷ್ಕರಿಸಲು ಬೇಡಿಕೆಗೆ ಇದೆ. ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಠ ದರ ಸೇರಿದಂತೆ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20ಕಿಮೀ ವ್ಯಾಪ್ತಿಯಲ್ಲಿ ಅಟೊರಿಕ್ಷಾ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿಯೂ ಇದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ನಗರ ವ್ಯಾಪ್ತಿಯಲ್ಲಿ ಹೊಸ ಅಟೊರಿಕ್ಷಾ ಪರವಾನಗಿಗೆ ಅವಕಾಶ ಇಲ್ಲ. ಎಲೆಕ್ಟ್ರಿಕಲ್ ಅಟೊರಿಕ್ಷಾಗಳಿಗೆ ಪರವಾನಗಿ ಅಗತ್ಯವಿಲ್ಲ. ಆದರೆ, ಅದರ ಚಾಲಕರು ಸಹ ಸಮವಸ್ತ್ರ ಧರಿಸಬೇಕು. ಅಟೋ ಮೀಟರ್ ಹಾಕದಿರುವ, ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.