
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಸಂತ್ರಸ್ತರನ್ನು ಅರಣ್ಯ ಪ್ರದೇಶದಿಂದ ಎತ್ತಂಗಡಿ ಮಾಡಿ ಅನ್ಯಾಯ ಮಾಡುತ್ತಿವೆ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ಅರಣ್ಯವಾಸಿಗಳಿಗೆ ಅರಣ್ಯಹಕ್ಕು ಕಾಯ್ದೆ ಪ್ರಕಾರ ನ್ಯಾಯಕೊಡಿ ಎಂದು ಹೇಳಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸುಮಾರು 80,000 ರೈತರ ಅರ್ಜಿಗಳನ್ನು ವಜಾ ಮಾಡಲಾಗಿದೆ ಎಂದು ಆರೋಪಿಸಿದರು.
ಈ ರೈತರ ಸಮಸ್ಯೆ ಬಗೆಹರಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಿ 14 ತಿಂಗಳು ಕಳೆದರೂ ಇನ್ನೂ ಸಮಸ್ಯೆ ಬಗೆಹರಿದಿಲ್ಲ. ರೈತರು ಭೂಮಿ ಹಕ್ಕುಪತ್ರ ಪಡೆದಿರುವ ಕಾನು, ಸೊಪ್ಪಿನಬೆಟ್ಟ, ಜಾಡಿ, ದನಗಳಿಗೆ ಮುಫತ್ತು, ಗೋಮಾಳ, ಹುಲ್ಲುಬನಿ ಪ್ರದೇಶಗಳನ್ನು ಅರಣ್ಯ ಎಂದು ಘೋಷಿಸಲಾಗಿದೆ. ಒಂದು ವೇಳೆ ಶರಾವತಿ ಮುಳುಗಡೆ ಸಂತ್ರಸ್ತರನ್ನು ಒಕ್ಕಲೆಬ್ಬಿಸುವ ಕ್ರಮ ಮುಂದುವರಿದರೆ ದೆಹಲಿಯ ರೈತರ ಮಾದರಿ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಶಿವಮೊಗ್ಗಕ್ಕೆ ಬಂದು ಸಂತ್ರಸ್ತರ ಪರ ಸಾರ್ವಜನಿಕ ಸಭೆ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದರೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಅದು ಇನ್ನೂ ಈಡೇರಲಿಲ್ಲ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.