ಶಿವಮೊಗ್ಗ: ನಗರದಾದ್ಯಂತ ಭೂಗತ ಕೇಬಲ್ಗಳನ್ನು ಅಳವಡಿಸಿದ್ದರೂ ಸ್ಮಾರ್ಟ್ ಸಿಟಿ ಸಂಸ್ಥೆಯವರು ವಿದ್ಯುತ್ ಕಂಬಗಳನ್ನು ತೆರವು ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೆಸ್ಕಾಂ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ₹ 300 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ನಗರದಾದ್ಯಂತ ಭೂಗತ ಕೇಬಲ್ಗಳ ಅಳವಡಿಸಲಾಗಿದೆ. ಆದರೆ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕದೆ ಹಾಗೆಯೇ ಬಿಟ್ಟಿರುವುದರಿಂದ ರಸ್ತೆಗಳ ಎರಡು ಬದಿಗಳಲ್ಲಿ ವಾಹನ ಸಂಚಾರಕ್ಕೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ತೀವ್ರ ತೊಂದರೆಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಮೆಸ್ಕಾಂ ಅಧಿಕಾರಿಗಳ ಸಭೆ ಕರೆಯಬೇಕು. ಸಭೆಗೆ ದಿನಾಂಕ ನಿಗದಿಪಡಿಸಬೇಕು. ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕಲು ಮೆಸ್ಕಾಂಗೆ ಗಡುವು ನಿಗದಿಪಡಿಸುವಂತೆ ಒತ್ತಾಯಿಸಲಾಯಿತು.
ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ನಾಗರಿಕ ವೇದಿಕೆಯಿಂದ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಪ್ರಮುಖರಾದ ಕೆ.ವಿ. ವಸಂತ್ಕುಮಾರ್, ಸತೀಶ್ಕುಮಾರ್ ಶೆಟ್ಟಿ, ಎಸ್.ಬಿ. ಅಶೋಕ್ಕುಮಾರ್, ಸೀತಾರಾಮ್, ಜನಮೇಜಿರಾವ್, ಡಾ. ಶ್ರೀನಿವಾಸ್, ಸ್ವಾಮಿ, ನಾಗರಾಜ್, ಚನ್ನವೀರಪ್ಪ ಗಾಮನಗಟ್ಟಿ, ಪುಷ್ಪಾಶೆಟ್ಟಿ, ವಿಜಯಾ ಶೆಟ್ಟಿ, ವಾತ್ಸಲ್ಯ ಶೆಟ್ಟಿ, ಪ್ರೊ. ಸತ್ಯನಾರಾಯಣ್ ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.