ಸೊರಬ: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ನೌಕರರ ಸಂಘ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಪಟ್ಟಣದ ಪುರಸಭೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ಪುರಸಭೆ ಮುಖ್ಯಾಧಿಕಾರಿ ಚಂದನ್ ಅವರಿಗೆ ಮನವಿ ಸಲ್ಲಿಸಲಾಯಿತು.
‘ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಖಾಯಂ ಮಾಡಬೇಕು. ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಸಲ್ಲದು. ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು’ ಎಂದು ಪೌರ ನೌಕರರ ಸಂಘದ ಅಧ್ಯಕ್ಷ ಜೆ.ಎಸ್. ಮಂಜುನಾಥ್ ಆಗ್ರಹಿಸಿದರು.
‘ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. 25– 30 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿ, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಯನ್ನು ಖಾಯಂ ಮಾಡಬೇಕು. ಸ್ವಚ್ಛತೆ, ಕಸ ಸಂಗ್ರಹ, ವಿಲೇವಾರಿ, ನೀರು ಪೂರೈಕೆ ಮತ್ತು ಒಳಚರಂಡಿ ನಿರ್ವಹಣೆ ಸ್ಥಗಿತ ಮಾಡುವ ಮೂಲಕ ಪ್ರತಿಭಟಿಸುತ್ತಿದ್ದೇವೆ. ಎಲ್ಲಾ ನೌಕರರಿಗೂ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು’ ಎಂದು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಏಳು ಕೋಟಿ ಒತ್ತಾಯಿಸಿದರು.
ಪೌರ ಕಾರ್ಮಿಕರಾದ ಸಂತೋಷ್, ಮಂಜುನಾಥ, ಕೃಷ್ಣಮೂರ್ತಿ, ಜಗದೀಶ, ದೇವರಾಜ, ಅಭಿಷೇಕ್, ಮಂಜು ಜೋಳದಗುಡ್ಡೆ, ಶಿವಮ್ಮ, ಮಂಜುಳಾ, ರಾಧಮ್ಮ, ಚಲುವಮ್ಮ, ಸುಭಾಷ್, ಉಮೇಶ್, ರಮೇಶ್, ಡಾಟಾ ಆಪರೇಟರ್ ಲಾಜರ್, ಕಾರ್ತಿಕ, ವಿನೋದ, ಅನೂತ್, ಸಂಪತ್, ವಾಹನ ಚಾಲಕರಾದ ಕಾರ್ತಿಕ, ಸುಭಾಷ್, ಇಂದೂಧರ, ದಾಸಣ್ಣ ಸೇರಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.