ಶಿಕಾರಿಪುರ: ‘ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಹಳ್ಳಿಗಳಲ್ಲಿ ಮೂಲಸೌಕರ್ಯಗಳನ್ನು ನೀಡಲು ಮುಂದಾಗಿದೆ. ನಿವೇಶನದಲ್ಲಿ ಮನೆ ಕಟ್ಟಲು ಅಗತ್ಯವಾದ ಅನುದಾನವನ್ನು ಸರ್ಕಾರದಿಂದ ತರುವ ಕಾರ್ಯವನ್ನು ನಾವು ಮಾಡುತ್ತೇವೆ. ಅಧಿಕಾರಿಗಳು ತಾಲ್ಲೂಕಿನಲ್ಲಿರುವ ಸರ್ಕಾರಿ ಭೂಮಿಯನ್ನು ಗುರುತಿಸಿ ಬಡವರಿಗೆ ನಿವೇಶನ ಹಂಚಲು ತಯಾರಿ
ಮಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಾಲ್ಲೂಕಿನಲ್ಲಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮಾತನಾಡಿ, ‘ನಿವೇಶನ ಹಕ್ಕುಪತ್ರ ಹಂಚುವಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶ್ರಮವಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಮಾರ್ಗ ನಿರ್ಮಾಣ ಯೋಜನೆ ಮಂಜೂರು ಮಾಡಿಸಲು ಸಂಸದ ರಾಘವೇಂದ್ರ ಸಾಕಷ್ಟು ಶ್ರಮ ಹಾಕಿದ್ದಾರೆ. ಆದರೆ ಕೆಲವು ರಾಜಕೀಯ ಮುಖಂಡರು ಈ ರೈಲ್ವೆ ಯೋಜನೆ ಅವೈಜ್ಞಾನಿಕ ಎಂದು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಅಸಮಾಧಾನವ್ಯಕ್ತಪಡಿಸಿದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ತೊಗರ್ಸಿಸಣ್ಣಹನುಮಂತಪ್ಪ, ಎಪಿಎಂಸಿ ಸದಸ್ಯ ಎ.ಬಿ.ಸುಧೀರ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್, ಮುಡುಬ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರನಾಯ್ಕ, ಹೋತನಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಿಬಾಯಿ, ಹಾರೋಗೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.