ADVERTISEMENT

ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸಿ: ಅನಿತಾ ಕುಮಾರಿ

ಸಿಎಂ ಬಸವರಾಜ ಬೊಮ್ಮಾಯಿಗೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 4:52 IST
Last Updated 26 ನವೆಂಬರ್ 2022, 4:52 IST
ಶರಾವತಿ ಸಂತ್ರಸ್ತರ ಪರವಾಗಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆಯ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ‍ಪದಾಧಿಕಾರಿಗಳು ಭಿತ್ತಿಪತ್ರ ಪ್ರದರ್ಶಿಸಿದರು
ಶರಾವತಿ ಸಂತ್ರಸ್ತರ ಪರವಾಗಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆಯ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ‍ಪದಾಧಿಕಾರಿಗಳು ಭಿತ್ತಿಪತ್ರ ಪ್ರದರ್ಶಿಸಿದರು   

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರ ಬದುಕು ಕೂಡ ಮುಳುಗಡೆಯಾಗಿದೆ. ಇದರ ಜೊತೆಗೆ ಮಲೆನಾಡಿನ ಸಮಸ್ಯೆಗಳು ಸಾಕಷ್ಟಿವೆ. ಶಿವಮೊಗ್ಗಕ್ಕೆ ಭಾನುವಾರ ಮುಖ್ಯಮಂತ್ರಿ ಬರುತ್ತಿದ್ದಾರೆ. ಅವರು ಆ ದಿನವೇ ಸಂತ್ರಸ್ತರ ಸಮಸ್ಯೆ ಮತ್ತು ಮಲೆನಾಡು ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಾಗಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು 15 ದಿನಗಳಲ್ಲಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಮಾತುಕೊಟ್ಟಿದ್ದರು. ಈಗಾಗಲೇ 10 ದಿನಗಳು ಕಳೆದಿವೆ. ಅವರು ಸಹ ಮುಖ್ಯಮಂತ್ರಿಗಳ ಜೊತೆಗಿರುತ್ತಾರೆ. ಸಂತ್ರಸ್ತರ ಬಗ್ಗೆ ಮೂಗಿಗೆ ತುಪ್ಪ ಹಚ್ಚುವ ಬಿಜೆಪಿ ನಾಯಕರೆಲ್ಲಾ ಇವತ್ತು ಪಕ್ಷ ಸಂಘಟನೆಯ ಹೆಸರಲ್ಲಿ ಬರುತ್ತಿದ್ದಾರೆ. ಅವರೆಲ್ಲರೂ ಶರಾವತಿ ಸಂತ್ರಸ್ತರ ಬಗ್ಗೆ ಗಮನಹರಿಸಬೇಕು ಎಂದರು.

ADVERTISEMENT

ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಕಾಂಗ್ರೆಸ್ ಜಾಗೃತ ಸಮಿತಿ ನ. 28 ರಂದು ಮಲೆನಾಡ ಜನಾಕ್ರೋಶದ ಹೆಸರಲ್ಲಿ ಪಾದಯಾತ್ರೆ ಮತ್ತು ಬೃಹತ್ ಸಮಾವೇಶ ಆಯೋಜಿಸಿದೆ. ಆಯನೂರಿನಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರೆಲ್ಲರೂ ಮತ್ತು ಸಂತ್ರಸ್ತ ಮಹಿಳೆಯರು ಭಾಗವಹಿಸಲಿದ್ದಾರೆ. ಹಾಗೆಯೇ ಸಂಜೆ 4 ಗಂಟೆಗೆ ಶಿವಮೊಗ್ಗದ ಎನ್ಇಎಸ್ ಕಾಲೇಜ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲೂ ಮಹಿಳೆಯರು ಪಾಲ್ಗೊಳ್ಳುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಶ್ವೇತಾ ಬಂಡಿ, ಕವಿತಾ, ಗೌರಮ್ಮ, ಮಂಜುಳಮ್ಮ, ರೇಷ್ಮಾ, ಸುವರ್ಣಾ ನಾಗರಾಜ್, ಸುಷ್ಮಾ, ಕವಿತಾ ರುದ್ರೇಶ್, ವಿಶಾಲಾಕ್ಷಿ, ಪ್ರತಿಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.