
ಶಿಕಾರಿಪುರ: ‘ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಬಹುಮುಖ್ಯ. ಅದನ್ನು ಅರಿತು ಕ್ರೀಡೆಯಲ್ಲಿ ಭಾಗವಹಿಸಬೇಕು’ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಕುವೆಂಪು ವಿಶ್ವವಿದ್ಯಾಲಯದ ಅಂತರಕಾಲೇಜು ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಟೂರ್ನಿಯ ಕುವೆಂಪು ವಿವಿ ತಂಡದ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ರೀಡೆ ಆಟಗಾರನ ವ್ಯಕ್ತಿತ್ವ ಎತ್ತಿ ಹಿಡಿಯುತ್ತದೆ. ಕ್ರೀಡೆಯಲ್ಲಿ ರಾಜಕೀಯ ಇರದೆ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವ ಕೆಲಸ ನಿರಂತರವಾಗಬೇಕು. ವಿದ್ಯಾರ್ಥಿಗಳ ಹಿತಕ್ಕಾಗಿ ಕಾಲೇಜಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತೇನೆ’ ಎಂದು ಭರವಸೆ ನೀಡಿದರು.
ಪ್ರಾಂಶುಪಾಲ ಬಿ.ಜಿ.ಚನ್ನಪ್ಪ ಮಾತನಾಡಿ, ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅಗತ್ಯವಿರುವ ಒಳಾಂಗಣ ಕ್ರೀಡಾಂಗಣ, ವಿಶಾಲ ಸಭಾಂಗಣ, ಕೊಠಡಿ ಸೇರಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸಂಸದ ಬಿ.ವೈ.ರಾಘವೇಂದ್ರ ಶ್ರಮಿಸಿದ್ದಾರೆ. ಅದಕ್ಕಾಗಿ ಪ್ರತಿವರ್ಷ ನಮ್ಮ ಕಾಲೇಜಿನಲ್ಲಿ ಅಂತರ್ ವಿ.ವಿ ಕ್ರೀಡಾಕೂಟ ನಡೆಯುತ್ತಿದೆ. ಸರ್ಕಾರ ನೀಡುವ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು’ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಬಿ.ಸಿ.ವೇಣುಗೋಪಾಲ್, ಕೋಟೋಜಿರಾವ್, ಸುಧೀರ್, ಫಾಲಾಕ್ಷಪ್ಪ, ಕುವೆಂಪು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಎನ್.ಡಿ.ವಿರೂಪಾಕ್ಷಪ್ಪ, ಕಾಲೇಜಿನ ಐಕ್ಯೂಎಸಿ ಸಂಚಾಲಕ ವಿ.ಹರೀಶ್, ಸಹ ಸಂಚಾಲಕಿ ಬಿ.ವಿ.ಸೌಮ್ಯಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪಟ್ಟಣ ರಾಕೇಶ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ವಿ.ನಾರಾಯಣ, ವಿದ್ಯಾರ್ಥಿಗಳು, ಉಪನ್ಯಾಸಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.