
ಶಿವಮೊಗ್ಗ: ‘ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ವಿದ್ಯಾರ್ಥಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಹಾಗೂ ಪೋಕ್ಸೊ ಕಾಯ್ದೆ ಕುರಿತು ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಸೂಚಿಸಿದರು.
ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಿಷನ್ ಸುರಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
‘ಶಿಕ್ಷಕರು ಮತ್ತು ವೈದ್ಯರು ಮಿಷನ್ ಸುರಕ್ಷಾ ಕಾರ್ಯಾಗಾರದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಲ್ಲಿ 146 ಪೋಕ್ಸೊ ಪ್ರಕರಣಗಳು ದಾಖಲಾಗಿದೆ. ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇದನ್ನು ತಡೆಗಟ್ಟಲು, ಅಗತ್ಯವಾದ ತರಬೇತಿಯನ್ನು ಈ ಕಾರ್ಯಾಗಾರದಲ್ಲಿ ನೀಡಲಿದ್ದು, ಇದನ್ನು ಸಂಪೂರ್ಣವಾಗಿ ಶಿಕ್ಷಕರು ಬಳಕೆ ಮಾಡಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಕೂಡ ಇದರ ಬಗ್ಗೆ ಅರಿವು ಮೂಡಿಸಬೇಕು’ ಎಂದರು.
‘ಇಂದಿನ ಮಕ್ಕಳಿಗೆ ಲೈಂಗಿಕ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಗೆ ಒಳಪಡಿಸುವುದು ಬಹು ಮುಖ್ಯವಾಗಿದೆ. ಶಾಲೆ, ಮನೆ ಹಾಗೂ ಸಮಾಜದಲ್ಲಾಗುವ ಅನೇಕ ಘಟನೆಗಳು ಅವರ ಮೇಲೆ ಪರಿಣಾಮ ಬೀರುತ್ತವೆ. ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಪ್ಪು ದಾರಿ ತುಳಿಯುವ ಸಾಧ್ಯತೆ ಇರುತ್ತದೆ. ಇದನ್ನು ತಡೆಯುವ ಪ್ರಯತ್ನ ಮಾಡಬೇಕು’ ಎಂದರು.
‘ಸಂಕುಚಿತ ಭಾವನೆ ತೆಗೆದು ಹಾಕುವುದು, ಮೂಢನಂಬಿಕೆ ಹೋಗಲಾಡಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು, ವೈದ್ಯರು ಕೆಲಸ ಮಾಡಬೇಕು. ಈ ಕುರಿತು ಕಾವಲು ಸಮಿತಿಯ ಸಭೆ ಹಾಗೂ ಗ್ರಾಮ ಪಂಚಾಯಿತಿಯ ಮಕ್ಕಳ ಸಭೆಯಲ್ಲಿ ಚರ್ಚೆಯಾಗಬೇಕು. ಶಿಕ್ಷಣ ಇಲಾಖೆ ಇದರ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಜಾಹೀರಾತು ಸಿದ್ಧಪಡಿಸಿ ಜಾಗೃತಿ ಮೂಡಿಸಬೇಕು. ಇಂತಹ ಕೆಲಸಗಳು ನಿರಂತರವಾಗಿ ನಡೆದರೆ ಮಾತ್ರ ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.
ಡಾ.ವೀಣಾಭಟ್ ಉಪನ್ಯಾಸ ನೀಡಿ, ‘ಸಮಾಜವು ಶಿಕ್ಷಿತವಾಗುತ್ತಿದ್ದರೂ, ಬಾಲ ಗರ್ಭಿಣಿ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಮಕ್ಕಳಲ್ಲಿ ಅಶ್ಲೀಲ ವಿಡಿಯೊ ವೀಕ್ಷಣೆ ವ್ಯಾಪಕವಾಗುತ್ತಿದೆ. ಇದರಿಂದಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಗಂಡು ಹೆಣ್ಣು ಅನ್ನದೇ ಎಲ್ಲಾ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ನೈತಿಕ ಶಿಕ್ಷಣದ ಜೊತೆಗೆ ಲೈಂಗಿಕ ಶಿಕ್ಷಣವೂ ಮಕ್ಕಳಿಗೆ ಅವಶ್ಯವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಜಿ.ಪಂ. ಯೋಜಾನಾಧಿಕಾರಿ ನಂದಿನಿ, ಬಿಇಒ ರಮೇಶ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ವರಪ್ಪ, ವಿವಿಧ ತಾಲ್ಲೂಕಿನ ಶಿಕ್ಷಕರು, ನೋಡಲ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
‘ಶಿಕ್ಷಕರು ಅರಿತುಕೊಳ್ಳಲಿ’
ವಿದ್ಯಾರ್ಥಿಗಳ ಅಪರಾಧ ಪ್ರಕರಣದಲ್ಲಿ ಶಿಕ್ಷಕರು 2ನೇ ಆರೋಪಿಯಾಗಿ ಬದಲಾಗುತ್ತಿದ್ದಾರೆ. ಶಾಲೆಗಳಲ್ಲಿ ಆಗುವ ದೌರ್ಜನ್ಯವನ್ನು ಶಿಕ್ಷಕರ ಬಳಿ ಬಂದು ಹೇಳಿದಾಗ ಶಿಕ್ಷಕರು ಅದನ್ನು ನಿರ್ಲಕ್ಷ್ಯ ವಹಿಸಬಾರದು. ಈ ಬಗ್ಗೆ ಎಲ್ಲಾ ಶಿಕ್ಷಕರು ಅರಿತುಕೊಳ್ಳಬೇಕು. ಇಂತಹ ವಿಚಾರ ಶಿಕ್ಷಕರ ಗಮನಕ್ಕೆ ಬಂದ ಕೂಡಲೇ 112 ಅಥವಾ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ದೂರು ನೀಡಬೇಕು. ವಿದ್ಯಾರ್ಥಿಗಳಿಗೆ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ತುಂಗಾನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.