ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರ ಪುತ್ರ ಸುಹಾಸ್(31) ಭಾನುವಾರ ಹೃದಯಾಘಾತದಿಂದ ನಿಧನರಾದರು.
ಬೆಳಿಗ್ಗೆ ಮನೆಯ ಮಹಡಿಯಿಂದ ಇಳಿಯುವ ವೇಳೆ ಹೃದಯಾಘಾತದಿಂದಾಗಿ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಆರ್.ಪ್ರಸನ್ನ ಕುಮಾರ್ ಅವರಿಗೆ ಸುಹಾಸ್ ಮತ್ತು ಸೂರಜ್ ಇಬ್ಬರು ಪುತ್ರರು. ಸೂರಜ್ ಅಮೇರಿಕದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸುಹಾಸ್ ಶಿವಮೊಗ್ಗದಲ್ಲೆ ಪೆಟ್ರೋಲ್ ಬಂಕ್ ನೋಡಿಕೊಳ್ಳುತ್ತಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿತ್ತು.
2013ರಲ್ಲಿ ತಮ್ಮ ಸ್ನೇಹಿತರೊಂದಿಗೆ ಮಂಡಗದ್ದೆಗೆ ತೆರಳಿ, ಶಿವಮೊಗ್ಗಕ್ಕೆ ವಾಪಸಾಗುತ್ತಿದ್ದ ವೇಳೆ ಸುಹಾಸ್ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅಂದಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಪಘಾತ ನಂತರ ಹಲವು ಬಾರಿ ಶಸ್ತ್ರಚಿಕಿತ್ಸೆ ನಡೆದಿತ್ತು. ಆದರೂ, ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಭಾನುವಾರ ಸಂಜೆ 4ಕ್ಕೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.