ಸಾಗರ: ತಾಲ್ಲೂಕಿನ ಶರಾವತಿ ಹಿನ್ನೀರ ಪ್ರದೇಶದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಸಿದ್ದಯ್ಯ ಅವರ ಅಸಹಜ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಪ್ರಮುಖರು ಶನಿವಾರ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.
‘ಕಳೆದ ಮೇ 16ರಂದು ಕೋಳೂರು ಗ್ರಾಮದ ಸಿದ್ದಯ್ಯ ಅವರ ಶವ ಮರಡವಳ್ಳಿ ಗ್ರಾಮದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಪತ್ತೆಯಾಗಿದೆ. ಅವರ ದೇಹದ ಮೇಲೆ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮ ಗೋ ಸಾಗಾಣಿಕೆ ಕೃತ್ಯ ನಡೆಯುತ್ತಿದೆ. ಇವುಗಳನ್ನು ಗುರುತಿಸಿದ ಕಾರಣಕ್ಕೆ ಸಿದ್ದಯ್ಯ ಅವರ ಸಾವು ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಆಯಾಮಗಳಿಂದಲೂ ಪ್ರಕರಣದ ತನಿಖೆ ಮಾಡಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳಿವೆ. ಸಿದ್ದಯ್ಯ ಅವರ ಸಾವಿನ ಪ್ರಕರಣವನ್ನು ಭೇದಿಸುವ ಮೂಲಕ ಈ ಅಕ್ರಮ ಚಟುವಟಿಕೆಗಳಿಗೂ ತಡೆ ಹಾಕಬಹುದು’ ಎಂದು ಮನವಿಯಲ್ಲಿ ಹೇಳಿದ್ದಾರೆ.
ವೀರಶೈವ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಕೆ.ವಿ.ಪ್ರವೀಣ್, ಪ್ರಮುಖರಾದ ಎ.ಎಸ್.ಪಾಟೀಲ್, ವೃಂದಾ ಜಗದೀಶ್, ಗಿರೀಶ್ ಗುಳೆಹಳ್ಳಿ, ಗುರು ಕಾಗೋಡು, ನಂದೀಶ್ ಸಿರಿವಂತೆ, ಅರುಣ್ ರಾಜ್, ತೇಜಸ್ವಿ ಎಂ.ಆರ್, ವ.ಶಂ.ರಾಮಚಂದ್ರ ಭಟ್, ಸುಭಾಷ್ ಕೌತಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.