ADVERTISEMENT

ಆಧುನಿಕ ತಂತ್ರಜ್ಞಾನದಿಂದ ಮೀನುಗಾರಿಕೆ ಕೈಗೊಳ್ಳಿ: ಬಿ.ವೈ.ರಾಘವೇಂದ್ರ

ಮತ್ಸ್ಯ ಸಂಪದ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 16:41 IST
Last Updated 27 ನವೆಂಬರ್ 2020, 16:41 IST
ಶಿಕಾರಿಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು
ಶಿಕಾರಿಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು   

ಶಿಕಾರಿಪುರ: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕ ರೀತಿಯಲ್ಲಿ ಮೀನುಗಾರಿಕೆ ನಡೆಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮೀನುಗಾರಿಕಾ ಇಲಾಖೆ ಆಯೋಜಿಸಿದ್ದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ಇಲಾಖೆ ಯೋಜನೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಚಟುವಟಿಕೆ ಜತೆ ಮೀನುಗಾರಿಕೆ ನಡೆಸಲು ಕೃಷಿಕರು ಮುಂದಾಗಬೇಕು. ಮೀನು ಹಿಡಿಯಲು ಸಮುದ್ರಕ್ಕೆ ತೆರಳಿದ ಮೀನುಗಾರರು ಮನೆಗೆ ಮರಳಿ ಬರುತ್ತಾರೆ ಎಂಬ ನಂಬಿಕೆ ಕುಟುಂಬ ವರ್ಗದವರಿಗೆ ಇರುವುದಿಲ್ಲ. ಜೀವಹಾನಿಯಾಗದ ರೀತಿಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಮೀನುಗಾರಿಕೆ ನಡೆಸಲು ಮುಂದಾಗ ಬೇಕಿದೆ ಎಂದು ಕಿವಿಮಾತು ಹೇಳಿದರು.

ADVERTISEMENT

ಕೇಂದ್ರ ಸರ್ಕಾರ ಮೀನುಗಾರರ ಆದಾಯವನ್ನು ದ್ವಿಗುಣಗೊಳಿಸಲು ಹಾಗೂ ಆರ್ಥಿಕ ಭದ್ರತೆ ನೀಡಲು ಕೇಂದ್ರ ಸರ್ಕಾರ ಮತ್ಸ್ಯ ಸಂಪದ ಯೋಜನೆ ಜಾರಿಗೊಳಿಸಿದೆ. ಕಾಟಾಚಾರಕ್ಕಾಗಿ ಯೋಜನೆಯನ್ನು ಕೇಂದ್ರ ಸರ್ಕಾರ ಮಾಡಿಲ್ಲ. ಮೀನುಗಾರರಿಗೆ ಶಕ್ತಿ ತುಂಬಲು ಯೋಜನೆ ಮಾಡಿದ್ದಾರೆ. ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳದೇ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ‘ಮೀನುಗಾರರ ಹೆಸರಿನಲ್ಲಿ ಕೆಲವರು ಪರವಾನಗಿ ಪಡೆದು ಮೀನುಗಾರರಾಗಿದ್ದಾರೆ. ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯುವರು ಮೀನುಗಾರರಾಗಿದ್ದಾರೆ. ಅಧಿಕಾರಿಗಳು ಅನರ್ಹ ಮೀನುಗಾರರ ಪರವಾನಗಿಯನ್ನು ರದ್ದುಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿರ್ದೇಶಕಿ ಸವಿತಾ ಶಿವಕುಮಾರನಾಯ್ಕ, ಕೆಪಿಟಿಸಿಎಲ್ ನಿರ್ದೇಶಕ ರಾಮಾನಾಯ್ಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯ್ಕ, ಇಒ ಪರಮೇಶ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಷಡಾಕ್ಷರಿ ಇದ್ದರು.

ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಹಾಯ ಧನದ ಚೆಕ್ ಅನ್ನು ರಾಘವೇಂದ್ರ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.