ADVERTISEMENT

ಕಾಂಗ್ರೆಸ್ ಅಧಿಕಾರಕ್ಕೆ ಆಸೆ ಪಡೋ ಪಕ್ಷ ಅಲ್ಲ: ಧ್ರುವನಾರಾಯಣ್

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 5:45 IST
Last Updated 12 ಜುಲೈ 2021, 5:45 IST

ಶಿವಮೊಗ್ಗ: ‘ಕಾಂಗ್ರೆಸ್ ಅಧಿಕಾರಕ್ಕೆ ಆಸೆ ಪಡೋ ಪಕ್ಷ ಅಲ್ಲ. ಸೇವಾ ಮನೋಭಾವ ಇರುವ ಪಕ್ಷ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.

ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದರ ಕುರಿತು ಯಾರೂ ಮಾತನಾಡಬಾರದು, ಇದು ಸೂಕ್ತ ಸಮಯವಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ, ನಾವೆಲ್ಲಾ ಒಟ್ಟಾಗಿದ್ದೇವೆ’ ಎಂದರು.

‘ಬಿಜೆಪಿ ಸರ್ಕಾರ ಅಧಿಕಾರದ ದಾಹಕ್ಕಾಗಿ ಪರಸ್ಪರ ಕಚ್ಚಾಟದಲ್ಲಿ ತೊಡಗಿದೆ. ಇದನ್ನು ನಾವು ಹೇಳುತ್ತಿಲ್ಲ, ಅವರದೇ ಪಕ್ಷದ ಯತ್ನಾಳ್, ವಿಶ್ವನಾಥ್ ಹೇಳುತ್ತಿದ್ದಾರೆ. ಆದರೂ, ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಯಾಕೆಂದರೆ ಅವರ ಹಿಂದೆ ಅವರ ಪಕ್ಷದ ಹೈಕಮಾಂಡ್ ಇದೆ’ ಎಂದು ಕುಟುಕಿದರು.

ADVERTISEMENT

‘ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷಗಳ ಕಾಲ ಯಾವುದೇ ಆಪಾದನೆ ಇಲ್ಲದೇ, ಭ್ರಷ್ಟಾಚಾರ ಇಲ್ಲದೇ ಒಳ್ಳೆಯ ಕಾರ್ಯಕ್ರಮ ರೂಪಿಸುವ ಮೂಲಕ ಉತ್ತಮ ಆಡಳಿತ ನೀಡಿದ್ದೇವೆ. ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.