ADVERTISEMENT

ಸಹೋದರರ ಕಲಹದಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಆರೋಪ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:11 IST
Last Updated 10 ನವೆಂಬರ್ 2020, 4:11 IST
ಸೊರಬದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮುಖಂಡ ರಾಜು ತಲ್ಲೂರು ಮಾತನಾಡಿದರು
ಸೊರಬದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮುಖಂಡ ರಾಜು ತಲ್ಲೂರು ಮಾತನಾಡಿದರು   

ಸೊರಬ: ಸಹೋದರರಾದ ಶಾಸಕ ಕುಮಾರ್‌ ಬಂಗಾರಪ್ಪ, ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಕಲಹದಿಂದಾಗಿ ತಾಲ್ಲೂಕಿನ ಅಭಿವೃದ್ಧಿ ಕುಂಠಿತಗೊಂಡಿದೆ. ಬಗರ್‌ಹುಕುಂ ಹೆಸರಿನಲ್ಲಿ ಮಧು ಬಂಗಾರಪ್ಪ ಕಮಿಷನ್ ಪಡೆದು ಸಾಗುವಳಿ ಚೀಟಿ ನೀಡಿದರೆ, ಈಗಿನ ಶಾಸಕ ಕುಮಾರ್ ಬಂಗಾರಪ್ಪ ಹಕ್ಕುಪತ್ರ ರದ್ದುಪಡಿಸುವ ಮೂಲಕ ಬಡ ಸಾಗುವಳಿದಾರರ ಬದುಕಿಗೆ ಕಂಟಕವಾಗಿದ್ದಾರೆ ಎಂದುಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಆರೋಪಿಸಿದರು.

ಸೋಮವಾರ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಪಾಸಿಟಿವ್ ಬಂದ ಕಾರಣ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಈಗಾಗಲೇ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 40 ಜನ ಸಂಭಾವ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಮತ್ತೊಮ್ಮೆ ಮುಖಂಡರ ಸಭೆ ಕರೆದು ಉಳಿದಿರುವ ಗ್ರಾಮ ಪಂಚಾಯಿತಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಒಳಪಡಿಸುವಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಷಡ್ಯಂತ್ರ ರೂಪಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರ ಪರಿಶ್ರಮದಿಂದ ದೇವಸ್ಥಾನ ಅಭಿವೃದ್ಧಿ ಕಂಡಿದೆ. ಕ್ಷೇತ್ರದ ಮಹಿಮೆ ಸಹಿಸದ ಕೆಲವರು ಅರ್ಚಕ ಶೇಷಗಿರಿ ಭಟ್ ಅವರನ್ನು ಮುಂದಿಟ್ಟುಕೊಂಡು ವ್ಯವಸ್ಥೆ ಕೆಡಿಸಲು ಹೊರಟಿದ್ದಾರೆ. ಶಾಸಕ ಕುಮಾರ್ ಬಂಗಾರಪ್ಪ ಅವರು ವಿವಾದವನ್ನು ತಿಳಿಗೊಳಿಸಲು ಮುಂದಾಗದೇ ಮತ್ತಷ್ಟು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು
ದೂರಿದರು.

ಹಿಂದುಳಿದ ಸಮುದಾಯಕ್ಕೆ ಸೇರಿರುವ ದೇವಸ್ಥಾನವನ್ನು ಉಳಿಸಿಕೊಳ್ಳಲು ತಳ ಸಮುದಾಯ ಒಂದಾಗುವ ಅನಿವಾರ್ಯ ಇದೆ. ಈ ನಿಟ್ಟಿನಲ್ಲಿ ಮಡಿವಾಳ ಸಮುದಾಯ ರಾಮಪ್ಪ ಅವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.