ADVERTISEMENT

ಕೋವಿಡ್ ಕೇಂದ್ರದಲ್ಲಿ ಅವ್ಯವಸ್ಥೆ: ಮುಖ್ಯಮಂತ್ರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 13:51 IST
Last Updated 7 ಅಕ್ಟೋಬರ್ 2020, 13:51 IST
ಮಲ್ಲಿಕಾರ್ಜುನ ಹಕ್ರೆ
ಮಲ್ಲಿಕಾರ್ಜುನ ಹಕ್ರೆ   

ಸಾಗರ: ತಾಲ್ಲೂಕಿನ ಬಂದಗದ್ದೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಕೋವಿಡ್ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ ಇದ್ದು, ಕೂಡಲೆ ಅದನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಪತ್ರ ಬರೆದಿದ್ದಾರೆ.

ಸರ್ಕಾರ ಕೋವಿಡ್ ಆರೈಕೆ ಕೇಂದ್ರದಲ್ಲಿನ ಓರ್ವ ರೋಗಿಯ ಊಟೋಪಚಾರಕ್ಕಾಗಿ ದಿನಕ್ಕೆ ₹ 250 ಭರಿಸುತ್ತಿದೆ. ಈ ಹಣದಿಂದ ಅತ್ಯುತ್ತಮ ಗುಣಮಟ್ಟದ ಆಹಾರ ಒದಗಿಸಬಹುದು. ಆದರೆ ಬಂದಗದ್ದೆ ಗ್ರಾಮದ ಆರೈಕೆ ಕೇಂದ್ರದಲ್ಲಿ ರೋಗಿಗಳಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದ್ದು ಮೂರು ದಿನಗಳಿಂದ ಊಟ ಮಾಡಿಲ್ಲ ಎಂದು ಅಲ್ಲಿನ ರೋಗಿಗಳು ದೂರಿದ್ದಾರೆ ಎಂದು ಹಕ್ರೆ ತಿಳಿಸಿದ್ದಾರೆ.

ಬಂದಗದ್ದೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಬ್ಬರೇ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆ ಇವರೆ ಕರ್ತವ್ಯ ನಿರ್ವಹಿಸಬೇಕಾಗಿದೆ. ಅಲ್ಲದೆ ಯಾವುದೇ ಸ್ಟಾಫ್ ನರ್ಸ್ ಕೂಡ ಇಲ್ಲಿ ಇಲ್ಲ. ಸಂಬಂಧಪಟ್ಟವರಿಗೆ ಈ ವಿಷಯವನ್ನು ಗಮನಕ್ಕೆ ತಂದರೂ ಲೋಪವನ್ನು ಸರಿಪಡಿಸುತ್ತಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.

ADVERTISEMENT

ಆರೈಕೆ ಕೇಂದ್ರ ಗ್ರಾಮಾಂತರ ಪ್ರದೇಶದಲ್ಲಿದ್ದು, ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಆದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಇದ್ದರೂ ಅದಕ್ಕೆ ಡೀಸೆಲ್ ಪೂರೈಸುತ್ತಿಲ್ಲ. ಕೋವಿಡ್‌ನಿಂದ ಗುಣಮುಖರಾದ ರೋಗಿಗಳನ್ನು ಅವರ ಮನೆಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಇಲ್ಲ. ತಾಲ್ಲೂಕಿನಲ್ಲಿ ಕೋವಿಡ್‌ ಸಾವಿನ ಅನುಪಾತದ ಪ್ರಮಾಣ ಶೇ 4.77 ತಲುಪಿದೆ. ಹೀಗಾಗಿ ಕೋವಿಡ್ ಆರೈಕೆ ಕೇಂದ್ರದಲ್ಲಿನ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.

ಪತ್ರದ ಜೊತೆಗೆ ರೋಗಿಗಳ ದೂರಿನ ಅರ್ಜಿ, ಆರೈಕೆ ಕೇಂದ್ರದಲ್ಲಿನ ಅವ್ಯವಸ್ಥೆಯ ವಿಡಿಯೊ ಲಗತ್ತಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.