ADVERTISEMENT

ತಂಬಾಕು ಮುಕ್ತ ಶಾಲಾ, ಕಾಲೇಜು ಸಂಕಲ್ಪಕ್ಕೆ ಜಿಲ್ಲಾಧಿಕಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 4:46 IST
Last Updated 1 ಜೂನ್ 2022, 4:46 IST

ಶಿವಮೊಗ್ಗ:ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಗ್ರಾಮ ಪಂಚಾಯ್ತಿ ಆವರಣಗಳನ್ನು ತಂಬಾಕು ಮುಕ್ತ ಮಾಡಲು ಸಂಕಲ್ಪ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅಭಿಪ್ರಾಯಪಟ್ಟರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ತಂಬಾಕು ಮತ್ತು ತಂಬಾಕಿನ ಉಪ ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್‌ಕಾರಕ ಕಾಯಿಲೆಗಳು ಹೆಚ್ಚುತ್ತಿವೆ. ಕುಟುಂಬಗಳ ಮುಖ್ಯಸ್ಥರೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವಲಂಬಿತರ ಬದುಕು ದಯನೀಯವಾಗಲಿದೆ. ತಂಬಾಕು ನಿಯಂತ್ರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ADVERTISEMENT

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಾಫ ಹುಸೇನ್ ಮಾತನಾಡಿ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಬೀಡಿ, ಸಿಗರೇಟು ಧೂಮಸಹಿತ ತಂಬಾಕು ಉತ್ಪನ್ನಗಳಲ್ಲಿ 7 ಸಾವಿರಕ್ಕೂ ಹೆಚ್ಚು ರಾಸಾಯನಿಕಗಳಿವೆ. ಅದರಲ್ಲಿನ 69ರಷ್ಟು ಕ್ಯಾನ್ಸರ್‌ಕಾರಕ ವಸ್ತುಗಳಾಗಿವೆ ಎಂದು ಮಾಹಿತಿ ನೀಡಿದರು.

ನಗರದ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಜಿಲ್ಲಾ ನ್ಯಾಯಾಲಯದ ಆವರಣದಿಂದ ಆರಂಭಗೊಂಡ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಐಐಎಂಎ ಹಾಲ್‌ ತಲುಪಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್‌ ಸುರಗೀಹಳ್ಳಿ, ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಒ.ಮಲ್ಲಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ವಿಜಯಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.