ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಆಗಸ್ಟ್ 14ರಂದು ಬೆಳಿಗ್ಗೆ 11ಕ್ಕೆ ಹುತಾತ್ಮರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಶಾಸಕ ಬಿ.ಕೆ. ಸಂಗಮೇಶ್ವರ, ಮುಖಂಡರಾದ ಸಿ.ಎಂ. ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಮಧು ಬಂಗಾರಪ್ಪ, ಕೆ.ಬಿ. ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಆರ್.ಎಂ. ಮಂಜುನಾಥಗೌಡ, ಗೋಪಾಲಕೃಷ್ಣ ಬೇಳೂರು, ಶಾಂತವೀರಪ್ಪಗೌಡ, ತೀ.ನಾ. ಶ್ರೀನಿವಾಸ್, ಮಂಜುನಾಥ ಭಂಡಾರಿ, ಪ್ರಫುಲ್ಲಾ ಮಧುಕರ್, ಗೋಣಿ ಮಾಲತೇಶ್, ಎಸ್.ಪಿ. ದಿನೇಶ್, ರಾಜು ತಲ್ಲೂರು ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1942ರ ಸೆಪ್ಟೆಂಬರ್ 26ರಂದು ಸ್ವಾತಂತ್ರ್ಯ ಘೋಷಣೆ ಮಾಡಿಕೊಂಡ ಗ್ರಾಮ ಈಸೂರು. ಬ್ರಿಟಿಷ್ ಅಧಿಕಾರಿಗಳಿಗೆ ಗ್ರಾಮದಲ್ಲಿ ಪ್ರವೇಶವಿಲ್ಲವೆಂದು ಫಲಕ ಅಳವಡಿಸಿ ‘ಏಸೂರು ಕೊಟ್ಟರು ಈಸೂರು ಬಿಡೆವು’ ಎಂಬ ಘೋಷವಾಕ್ಯದೊಂದಿಗೆ ಬ್ರಿಟಿಷ್ ಸರ್ಕಾರದ ವಿರುದ್ಧ ಹೋರಾಡಿದ ಮೊದಲ ಗ್ರಾಮ. ಇದರ ಫಲವಾಗಿ 5 ಜನರಿಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. 40ಕ್ಕೂ ಹೆಚ್ಚು ಸ್ವಾತಂತ್ರ್ಯ ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದರಿಂದಾಗಿ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿತ್ತು. ಈ ಕಾರಣದಿಂದ ಹುತಾತ್ಮರ ದಿನಾಚರಣೆಯನ್ನು ಈಸೂರಿನಲ್ಲಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಆರ್. ಪ್ರಸನ್ನಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯ ಎಚ್.ಸಿ. ಯೋಗೀಶ್, ಮುಖಂಡರಾದ ಸಿ.ಎಸ್. ಚಂದ್ರಭೂಪಾಲ್, ಚಂದ್ರಶೇಖರ್, ರಂಗಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.