ಶಿವಮೊಗ್ಗ: ‘ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆ ನೀಡುವ ಜೊತೆಗೆ, ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸುತ್ತದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆಯಿಂದ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಜಿಲ್ಲೆ ಪ್ರಾಕೃತಿಕವಾಗಿ ತನ್ನದೇ ಆದ ಹಿರಿಮೆ ಹೊಂದಿದ್ದು, ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ. ಪ್ರವಾಸಿಗರು ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರವಾಸಿಗರು ಇನ್ನಷ್ಟು ಪ್ರಮಾಣದಲ್ಲಿ ಭೇಟಿ ನೀಡುವಂತೆ ಮಾಡಲು ಇಲ್ಲಿನ ಪ್ರವಾಸಿ ತಾಣಗಳ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದರು.
‘ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಇನ್ನಷ್ಟು ಆಕರ್ಷಣೀಯ ಮತ್ತು ಮೂಲ ಸೌಲಭ್ಯ ಕಲ್ಪಿಸುವುದರ ಜತೆಗೆ ಉತ್ತಮ ಪರಿಸರ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಆದ್ಯತೆ ನೀಡುವುದು ಅತ್ಯಗತ್ಯ. ಪ್ರವಾಸಕ್ಕೆಂದು ಎಲ್ಲರೂ ಬೇರೆಡೆ ಹೋಗುತ್ತೇವೆ. ಇಲ್ಲಿಯೇ ಅನೇಕ ಉತ್ತಮ ತಾಣಗಳಿವೆ. ಅವುಗಳತ್ತ ಕಣ್ಣಾಯಿಸಬೇಕು’ ಎಂದರು.
‘ಜಿಲ್ಲೆಯ 41 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಈ ಹಿಂದೆ ಸರ್ಕಾರ ಘೋಷಿಸಿತ್ತು. ಈಗ ಸೊರಬ ಪಟ್ಟಣದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಶಕುಂತಲಾ ಬಂಗಾರಪ್ಪ ಅವರ ಸಮಾಧಿ ಸ್ಥಳ ‘ಬಂಗಾರ ಧಾಮ’ಕ್ಕೆ ರಾಜ್ಯ ಸರ್ಕಾರ ಪ್ರವಾಸಿ ತಾಣದ ಮನ್ನಣೆ ನೀಡಿದೆ. ಇನ್ನೂ 23 ಹೊಸ ಸ್ಥಳಗಳನ್ನು ಸೇರ್ಪಡೆಗೊಳಿಸಿ, 64 ಸ್ಥಳಗಳ ಪಟ್ಟಿ ಬಿಡುಗಡೆಗೊಳಿಸಿದೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಉತ್ತಮ ಪ್ರವಾಸಿ ತಾಣಗಳು ಕಾಣಸಿಗುತ್ತವೆ. ಇಲ್ಲಿಗೆ ಇತರೆ ದೇಶದಿಂದಲೂ ಪ್ರವಾಸಿಗರು ಬರುತ್ತಾರೆ. ಯಾವುದೇ ಸರ್ಕಾರ ಇರಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಆದ್ಯತೆ ನೀಡಬೇಕು. ₹200 ಕೋಟಿ ವ್ಯಯಿಸಿ ಜೋಗ ಜಲಪಾತ ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
‘ಜೋಗದಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಇಲ್ಲಿ ಗ್ಲಾಸ್ ಹೌಸ್ ನಿರ್ಮಿಸಬೇಕು ಎಂಬ ಯೋಚನೆ ಇದೆ. ಕೊಡಚಾದ್ರಿ ತಪ್ಪಲು ಅಭಿವೃದ್ಧಿಗೆ ಜಿಲ್ಲಾಡಳಿತ ಒತ್ತು ನೀಡಬೇಕು. ಕೆಳದಿ, ಇಕ್ಕೇರಿ, ನಗರ ಕೋಟೆ- ಇಂತಹ ಪ್ರದೇಶಗಳಲ್ಲಿ ಹೆಚ್ಚು ಸೌಲಭ್ಯ ಕಲ್ಪಿಸಬೇಕು’ ಎಂದರು.
‘ಕಾರ್ಯಕ್ರಮದ ಯಶಸ್ಸಿಗೆ ಅನೇಕರು ಕೈ ಜೋಡಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಲೋಗೊ ರಚಿಸಲು ಸೂಚಿಸಲಾಗಿತ್ತು. 500 ಕ್ಕೂ ಹೆಚ್ಚು ಸಾರ್ವಜನಿಕರು, ಯುವಕ–ಯುವತಿಯರು ಛಾಯಾಚಿತ್ರ ಕಳುಹಿಸಿದ್ದರು. ಅನೇಕರು ವಿಡಿಯೊ ಕೂಡ ಕಳುಹಿಸಿಕೊಟ್ಟಿದ್ದಾರೆ. ಇದರಲ್ಲಿ ಅಂತಿಮವಾಗಿ ಒಂದನ್ನು ಆಯ್ಕೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಘಟಕದ ಅಧ್ಯಕ್ಷೆ ಜಿ.ಪಲ್ಲವಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಟಿ.ಧರ್ಮಪ್ಪ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಪ್ರೊಬೇಷನರಿ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು, ಸಿಸಿಎಫ್ ಹನುಮಂತಪ್ಪ ಇದ್ದರು.
ಅ.2 ರವರೆಗೆ ಛಾಯಾಚಿತ್ರ ಪ್ರದರ್ಶನ
ಕುವೆಂಪು ರಂಗಮಂದಿರದಲ್ಲಿ ಅ.2 ರವರೆಗೆ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ 300ಕ್ಕೂ ಹೆಚ್ಚು ಛಾಯಾಚಿತ್ರಗಳು ಮತ್ತು ವಿಡಿಯೊ ಪ್ರದರ್ಶನ ಆಯೋಜಿಸಲಾಗಿದೆ. ಇದು ಕಣ್ಮನ ಸೆಳೆಯುತ್ತಿದೆ. ‘ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯ ಪ್ರವಾಸೋದ್ಯಮ ಕುರಿತ ಲೋಗೊ ವೆಬ್ಸೈಟ್ ಟ್ಯಾಗ್ಲೈನ್ ವಿಡಿಯೊಗಳನ್ನು ಗಣ್ಯರು ಅನಾವರಣಗೊಳಿಸಿದರು. ಇಲಾಖೆಯ ವೆಬ್ಸೈಟ್: https://shivamoggatourism.com/ ಗೆ ಸಂಪರ್ಕಿಸಬಹುದು. ಇದರಲ್ಲಿ ಗುಡಿ ಕೈಗಾರಿಕೆ ಮತ್ತು ಪ್ರವಾಸಿ ತಾಣಗಳ ಮಾಹಿತಿ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.