ತುಮರಿ: ಕರೂರು ಹೋಬಳಿ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ. ಶನಿವಾರ ಇಲ್ಲಿನ ಕಾರಣಿ ಗ್ರಾಮದಲ್ಲಿ ಮೇಯುತ್ತಿದ್ದ ಎತ್ತುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಒಂದು ಹಸು ಸ್ಥಳದಲ್ಲೇ ಮೃತಪಟ್ಟಿದೆ.
ಇಲ್ಲಿನ ಮಂಜಪ್ಪ ಮದನಗೋಡು ಅವರಿಗೆ ಸೇರಿದ ಹಸುವಿನ ಮೇಲೆ ತೊಡೆಯ ಭಾಗಕ್ಕೆ ಬಲವಾದ ಗಾಯವಾಗಿ ಅದು ಸ್ಥಳದಲ್ಲೇ ಮೃತಪಟ್ಟಿದೆ. ಎರಡು ದಿನಗಳ ಹಿಂದೇ ಇದೇ ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಹಸುವನ್ನು ಚಿರತೆ ಕೊಂದು ಹಾಕಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ ಗ್ರಾಮದ 4 ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಆದರೆ ಇದುವರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇತ್ತ ಗಮನ ಹರಿಸದೇ ಇರುದರಿಂದ ರೈತರು ಭಯದಿಂದ ಜೀವನ ನಡೆಸುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಸದ್ಯ ಘಟನೆಯಿಂದ ಗ್ರಾಮಸ್ಥರು ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದು ಶೀಘ್ರವೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.