ಪ್ರತಿಭಟನೆ
–ಪ್ರಜಾವಾಣಿ ಚಿತ್ರ
ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ಥರಿಗೆ ನಿವೇಶನ ಹಂಚದೆ ವಿಳಂಬ ನೀತಿ ಅನುಸರಿಸುತ್ತಿರುವುದು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿ ಅ.9ರಂದು ಬೆಳಿಗ್ಗೆ 10 ಗಂಟೆಗೆ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಮಿತಿಯ ಅಧ್ಯಕ್ಷ ಎಂ.ಬಿ. ಕೃಷ್ಣಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡಿದ್ದ ನಮಗೆ ನಿವೇಶನ ಕೊಡುವುದಾಗಿ ಸರ್ಕಾರ ಹೇಳಿತ್ತು. ನ್ಯಾಯಾಲಯ ಕೂಡ ಅವರಿಗೆ ನಿವೇಶನ ಕೊಡಿ ಎಂದು ಆದೇಶಿಸಿದೆ. ನಮಗೆ ನಿವೇಶನವನ್ನು ವಿಮಾನ ನಿಲ್ದಾಣ ಉದ್ಘಾಟನೆಗೆ ಮೊದಲೇ ಕೊಡಬೇಕಿತ್ತು. ಆದರೆ ಕೊಡಲಿಲ್ಲ. ಉದ್ಘಾಟನೆಯ ದಿನ ನಾವು ಪ್ರತಿಭಟನೆ ಹಮ್ಮಿಕೊಂಡಿರುವುದನ್ನು ಕಂಡು ಜಿಲ್ಲಾಡಳಿತ ನಿವೇಶನ ಹಂಚಿಕೆಯ ಪತ್ರವನ್ನೂ ನಮಗೆ ಕೊಟ್ಟಿತ್ತು. ಆದರೆ ಅಲ್ಲಿ ನಿವೇಶನ ಹಂಚದಂತೆ ಕೆಲವರು ಕೋರ್ಟ್ ಮೊರೆ ಹೋಗಿದ್ದರು. ತಡೆಯಾಜ್ಞೆ ತಂದಿದ್ದರು. ನಾವೇ ವಕೀಲರನ್ನು ಇಟ್ಟು ತಡೆಯಾಜ್ಞೆ ತೆರವುಗೊಳಿಸಿದ್ದೆವು’ ಎಂದು ಹೇಳಿದರು.
ಆದರೂ ನಮಗೆ ನಿವೇಶನ ಹಂಚಿಕೆಯಾಗಿಲ್ಲ. ಸಂತ್ರಸ್ತ, ರೈತರಿಗೆ ಮೂರು ತಿಂಗಳ ಒಳಗೆ ನಿವೇಶನ ಹಂಚಿಕೆ ಮಾಡಲು ಹೈಕೋರ್ಟ್ ಆದೇಶ ನೀಡಿದೆ. ಇಷ್ಟಾದರೂ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಇದೂವರೆಗೂ ನಮಗೆ ನಿವೇಶನ ಹಂಚಿಕೆ ಪತ್ರ ನೀಡಿಲ್ಲ. ಸುಮಾರು 341 ಸಂತ್ರಸ್ತರಿದ್ದೇವೆ. ಜಿಲ್ಲಾಡಳಿತದ ವಿಳಂಬ ನೀತಿ ವಿರೋಧಿಸಿ ಅ.9ರಂದು ಅನಿರ್ದಿಷ್ಟ ಕಾಲಾವಧಿವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಪ್ರಕರಣ ಕೂಡ ದಾಖಲಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರಾದ ಶಿವಾನಂದ, ರಾಮಣ್ಣ, ನಾಗರಾಜ್, ಎನ್.ಟಿ. ಕುಮಾರ್, ವೀರಭದ್ರ, ರಾಘವೇಂದ್ರ, ಬಸವಲಿಂಗಪ್ಪ, ರಾಮಣ್ಣ, ರಂಗಪ್ಪ, ಮಹಾದೇವ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.