ADVERTISEMENT

ರಂಗಭೂಮಿಯಲ್ಲಿ ತಂತ್ರಜ್ಞಾನ ಬಳಸಿ: ಆರ್.ಕೆ.ಸಿದ್ರಾಮಣ್ಣ

ರಂಗೋತ್ಸವ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ರಾಮಣ್ಣ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 5:02 IST
Last Updated 28 ಮಾರ್ಚ್ 2021, 5:02 IST
ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ರಂಗಾಯಣದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ‘ಎಸ್. ಮಾಲತಿ ರಂಗೋತ್ಸವ’ ಕಾರ್ಯಕ್ರಮವನ್ನು ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ರಾಮಣ್ಣ ಶನಿವಾರ ಉದ್ಘಾಟಿಸಿದರು
ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ರಂಗಾಯಣದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ‘ಎಸ್. ಮಾಲತಿ ರಂಗೋತ್ಸವ’ ಕಾರ್ಯಕ್ರಮವನ್ನು ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ರಾಮಣ್ಣ ಶನಿವಾರ ಉದ್ಘಾಟಿಸಿದರು   

ಶಿವಮೊಗ್ಗ: ತಂತ್ರಜ್ಞಾನವನ್ನು ಬಳಸಿಕೊಂಡು ರಂಗಭೂಮಿಗೆ ಇನ್ನಷ್ಟು ಜೀವ ತುಂಬುವ ಕಾರ್ಯ ಇಂದಿನ ಅಗತ್ಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ.ಸಿದ್ರಾಮಣ್ಣ ಹೇಳಿದರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ರಂಗಾಯಣದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ‘ಎಸ್.ಮಾಲತಿ ರಂಗೋತ್ಸವ’ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು
ಮಾತನಾಡಿದರು.

ಸಾಂಸ್ಕೃತಿಕ ರಂಗದಲ್ಲಿ ಇಡೀ ರಾಜ್ಯಕ್ಕೆ ಮಾರ್ಗದರ್ಶಕ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆಯಿದೆ. ಬದಲಾದ ಪರಿಸ್ಥಿತಿಯಲ್ಲಿ ರಂಗಕರ್ಮಿಗಳು ಸಂಕಷ್ಟದಲ್ಲಿದ್ದು, ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಲಾವಿದರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮಾತ್ರವಲ್ಲದೆ ಸಾರ್ವಜನಿಕರೂ ಕೈಜೋಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಯಬೇಕಾಗಿದೆ ಎಂದು ಸಲಹೆ ನೀಡಿದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಾಯಣ ನಿರ್ದೇಶಕ ಸಂದೇಶ ಜವಳಿ, ‘ಎಸ್. ಮಾಲತಿ ಅವರ ನೆನಪಿನಲ್ಲಿ ಈ ಬಾರಿ ವಿಶ್ವ ರಂಗಭೂಮಿ ದಿನಾಚರಣೆ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಾಟಕ ಪ್ರದರ್ಶನಗಳು, ರಂಗಗೀತೆಗಳ ಗಾಯನ, ವಿಚಾರಗೋಷ್ಠಿಗಳು ಮಾತ್ರವಲ್ಲದೆ ರಂಗ ಕಲಾವಿದರ ಸಮಾವೇಶ ಆಯೋಜಿಸಲಾಗಿದೆ’ ಎಂದು ವಿವರಿಸಿದರು.

ಎಸ್.ಮಾಲತಿ ಅವರ ನೆನಪಿನಲ್ಲಿ ಜಯಪ್ರಕಾಶ್ ಮಾವಿನಕುಳಿ ಅವರು ಸಂಪಾದಿಸಿರುವ ‘ಬಹುಮುಖಿ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಪ್ರೊ.ಎಸ್.ಸಿ. ಗೌರಿಶಂಕರ್ ಅವರು ಎಸ್.ಮಾಲತಿ ಕುರಿತು ಮಾತನಾಡಿದರು.

ಸಭಾ ಕಾರ್ಯಕ್ರಮದ ಬಳಿಕ ರಂಗ ಪರಿವರ್ತನ ರಂಗಸಮಾಜ ಮೈಸೂರು ತಂಡದಿಂದ ‘ಬೆಟ್ಟದ ಜೀವ’ ನಾಟಕ ಪ್ರದರ್ಶನ
ನಡೆಯಿತು.

ರಂಗ ಸಮಾಜದ ಸದಸ್ಯ ಹಾಲಸ್ವಾಮಿ, ಶಿವಮೊಗ್ಗ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೊಟ್ರಪ್ಪ ಹಿರೆಮಾಗಡಿ, ರಂಗಕರ್ಮಿ ಪುರುಷೋತ್ತಮ ತಲವಾಟ, ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್, ಮಂಜುನಾಥ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.