ಶಿಕಾರಿಪುರ:ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿರುವ ಮತಗಟ್ಟೆ ಕೇಂದ್ರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಈ ಕ್ಷೇತ್ರದಲ್ಲಿ 9ಶಾಸಕರು ಹಾಗೂ ಇಬ್ಬರು ಸಂಸದರು ನಮ್ಮ ಪಕ್ಷದವರೇ ಇದ್ದಾರೆ. ಶಾಸಕರು ಹಾಗೂ ಮಂತ್ರಿಗಳು ಉತ್ಸಾಹದಿಂದ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ನಮಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೈಯಕ್ತಿಕ ಟೀಕೆ ನಡೆಸುತ್ತಿರುವ ವಿರೋಧ ಪಕ್ಷ ಮುಖಂಡರಿಗೆ ಈ ಚುನಾವಣೆ ಫಲಿತಾಂಶ ಉತ್ತರ ಸಿಗುತ್ತದೆ. ಸ್ಥಳೀಯ ಸಂಸ್ಥೆಗಳ ಈ ಚುನಾವಣೆಯಲ್ಲಿ ಜನರು 15ಕ್ಷೇತ್ರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ ಕೊಟ್ಟರೇ ಅದರ ಅರ್ಥ ಗ್ರಾಮೀಣಾ ಪ್ರದೇಶದಲ್ಲಿ ಕಾಂಗ್ರೆಸ್ ದೂಳಿಪಟವಾಗಿ ಬಿಜೆಪಿ ಪರ ಅಲೆ ಇದೆ ಎಂಬುದು ಸ್ಪಷ್ಟವಾಗುತ್ತದೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರಲು ಈ ಫಲಿತಾಂಶ ನಾಂದಿಯಾಗಲಿದೆ ಎಂದರು.
ಪುತ್ರ ವಿಜಯೇಂದ್ರ ಸಚಿವ ಸ್ಥಾನದ ಅಪೇಕ್ಷೆ ಇಟ್ಟು ಕೊಂಡಿಲ್ಲ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ತಿರ್ಮಾನ ತೆಗೆದುಕೊಳ್ಳುತ್ತಾರೆ. ಪುತ್ರ ವಿಜಯೇಂದ್ರ ಗೆ ಸಚಿವ ಸ್ಥಾನದ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,ವಿಜಯೇಂದ್ರ ಸಚಿವ ಸ್ಥಾನದ ಅಪೇಕ್ಷೆ ಇಟ್ಟುಕೊಂಡಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.