ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಮುಂದಿನ ದಿನಗಳಲ್ಲಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂದು ಪೇಜಾವರ ಮಠದ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ಹೇಳಿದರು.
ಶಿವಮೊಗ್ಗದಲ್ಲಿ ತಮ್ಮನ್ನು ಭೇಟಿ ಮಾಡಿದ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗಕ್ಕೆ ಆಶೀರ್ವದಿಸಿ, ಅವರು ಮಾತನಾಡಿದರು.
‘ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪನೆಗೊಂಡ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಆಶಾದಾಯಕ ಬೆಳವಣಿಗೆಗಳು ಕಂಡು ಬರುತ್ತಿವೆ. ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರು, ಸಂಸದರೊಂದಿಗೆ ಚರ್ಚಿಸುತ್ತೇನೆ ಎಂದು ಶ್ರೀಗಳು ತಿಳಿಸಿದರು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಸೇರಿದಂತೆ ಇನ್ನಿತರರು ನಿಯೋಗದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.