
ಸಾಗರ: ಶರಾವತಿ ಪಂಪ್ಡ್ ವಿದ್ಯುತ್ ಸ್ಟೋರೇಜ್ ಯೋಜನೆಗೆ ಕೇಂದ್ರದ ವನ್ಯಜೀವಿ ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ವೃಕ್ಷಲಕ್ಷ ಆಂದೋಲನದ ಪ್ರಕಟಣೆ ಸ್ಪಷ್ಟಪಡಿಸಿದೆ.
ವೃಕ್ಷಲಕ್ಷ ಆಂದೋಲನ, ಬೇಡ್ತಿ ಸಮಿತಿ, ಪಶ್ಚಿಮಘಟ್ಟ ಉಳಿಸಿ ಆಂದೋಲನದ ನಿಯೋಗ ಈಚೆಗೆ ದೆಹಲಿಗೆ ತೆರಳಿ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಮಾಹಿತಿ ಲಭ್ಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗಳ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಪ್ರಸ್ತಾವ ಬಂದಿಲ್ಲ. ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆ ಪಶ್ಚಿಮಘಟ್ಟ ಪ್ರದೇಶದ ಅಸ್ತಿತ್ವಕ್ಕೆ ಮಾರಕವಾಗಬಹುದಾದ ಯೋಜನೆಗಳ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಕೇಂದ್ರ ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಂಕಾಳೆ ವೈದ್ಯ, ಶಾಸಕ ಭೀಮಣ್ಣ ನಾಯ್ಕ್, ಶಿವರಾಮ್ ಹೆಬ್ಬಾರ್, ಶಾಂತಾರಾಮ್ ಸಿದ್ದಿ, ಪರಿಸರ ಕಾರ್ಯಕರ್ತ ಅನಂತ ಹೆಗಡೆ ಅಶೀಸರ, ಬಾಲಚಂದ್ರ ಸಾಯಿಮನೆ, ನಾರಾಯಣ ಗಡಿಕೈ ಇದ್ದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.