ADVERTISEMENT

ಅತ್ಯಾಚಾರ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಬಾಲಕಿಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 5:25 IST
Last Updated 12 ಡಿಸೆಂಬರ್ 2020, 5:25 IST
ಸಾಗರದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪ್ರಮುಖರು ಶಿವಮೊಗ್ಗ ಹಾಗೂ ಸಾಗರದಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಾಗರದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪ್ರಮುಖರು ಶಿವಮೊಗ್ಗ ಹಾಗೂ ಸಾಗರದಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.   

ಸಾಗರ: ಶಿವಮೊಗ್ಗ ಹಾಗೂ ಸಾಗರದಲ್ಲಿ ಬಾಲಕಿಯರ ಮೇಲೆ ನಡೆದಿರುವ ಅತ್ಯಾಚಾರ ಖಂಡಿಸಿ ಶುಕ್ರವಾರ ಇಲ್ಲಿನ ಕಾಂಗ್ರೆಸ್ ಮಹಿಳಾ ಘಟಕದ ಪ್ರಮುಖರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ‘ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದ ಬಾಲಕಿಯ ಮೇಲೆ ಆಸ್ಪತ್ರೆಯ ಗುತ್ತಿಗೆ ನೌಕರ ಅತ್ಯಾಚಾರ ನಡೆಸಿರುವುದುಆಘಾತಕಾರಿ. ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಕೋವಿಡ್ ರೋಗಿಗಳ ಆರೈಕೆಯಲ್ಲಿ ತೊಡಗಿರುವಾಗ ಇಂತಹ ಪ್ರಕರಣ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ’ ಎಂದರು.

‘ಸಾಗರದ ಜೆಪಿ ನಗರ ಬಡಾವಣೆಯಲ್ಲೂ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಬಡ ಹಾಗೂ ಮಧ್ಯಮ ವರ್ಗದ ಬಾಲಕಿಯರ ಮೇಲೆ ನಿರಂತರವಾಗಿ ಇಂತಹ ದೌರ್ಜನ್ಯ ನಡೆಯುತ್ತಿದೆ. ಬಿಜೆಪಿ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಸಾಕ್ಷಿ’ ಎಂದು ದೂರಿದರು.

ADVERTISEMENT

ಕೆಪಿಸಿಸಿ ಕಾರ್ಯದರ್ಶಿ ರಾಜನಂದಿನಿ ಕಾಗೋಡು, ‘ಅತ್ಯಾಚಾರದಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ’ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು, ‘ಅತ್ಯಾಚಾರ ಪ್ರಕರಣದ ತೀವ್ರತೆ ಕಡಿಮೆಯಾಗುವ ಮುನ್ನವೇ ನ್ಯಾಯಾಲಯಗಳಲ್ಲಿ ಶೀಘ್ರ ವಿಚಾರಣೆಯಾಗಿ ತೀರ್ಪು ಬರುವಂತಾಗಬೇಕು. ಆಗ ಹೆಚ್ಚಿನ ಆರೋಪಿಗಳು ಶಿಕ್ಷೆಗೆ ಗುರಿಯಾಗುವುದು ಖಚಿತ’ ಎಂದು
ಹೇಳಿದರು.

ಮಹಿಳಾ ಕಾಂಗ್ರೆಸ್‌ನ ನಗರ ಘಟಕದ ಅಧ್ಯಕ್ಷೆ ಮಧು ಮಾಲತಿ, ಗ್ರಾಮಾಂತರ ಅಧ್ಯಕ್ಷೆ ಸುಮಂಗಲ ರಾಮಕೃಷ್ಣ, ಪ್ರಮುಖರಾದ ರಫೀಕ್ ಬಾಬಾಜಾನ್, ಮಹಾಬಲ ಕೌತಿ, ಗಣಪತಿ ಮಂಡಗಳಲೆ, ಪರಿಮಳ, ಸರಸ್ವತಿ ನಾಗರಾಜ್, ನಾಗರಾಜ್ ಸ್ವಾಮಿ, ಗಣಾಧೀಶ್, ವೆಂಕಟೇಶ್ ಮೆಳವರಿಗೆ, ಅನ್ವರ್ ಬಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.