ಸಾಗರ:ಲಾಕ್ಡೌನ್ನಿಂದ ಈ ಭಾಗದ ಕಟ್ಟಡ ಕಾರ್ಮಿಕರು ಕೂಡ ತೊಂದರೆಗೆ ಒಳಗಾಗಿದ್ದಾರೆ. ಇಂತಹ ವೇಳೆಯಲ್ಲಿ ಸರ್ಕಾರದ ಸೌಲಭ್ಯಗಳು ಅವರಿಗೆ ತಲುಪುವಂತೆ ಮಾಡುವುದು ಕಾರ್ಮಿಕ ಇಲಾಖೆಯ ಜವಾಬ್ದಾರಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸುವ ಸಂಬಂಧ ನಗರಸಭೆ ರಂಗಮಂದಿರದಲ್ಲಿ ಶನಿವಾರ ಕಾರ್ಮಿಕ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಒಟ್ಟು ಹದಿನಾರು ಸಾವಿರ ನೋಂದಾಯಿತ ಕಟ್ಟಡ ಕಾರ್ಮಿಕರು ಇದ್ದಾರೆ. ಸರ್ಕಾರ ಒಂದು ತಾಲ್ಲೂಕಿಗೆ ಎರಡು ಸಾವಿರ ಆಹಾರದ ಕಿಟ್ ವಿತರಿಸಲು ಅವಕಾಶ ನೀಡಿದೆ. ಕೊರತೆ ಬೀಳುವ ಆಹಾರದ ಕಿಟ್ಗಳನ್ನು ಶೀಘ್ರವಾಗಿ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರ ಈಗಾಗಲೇ ಕಟ್ಟಡ ಕಾರ್ಮಿಕರಿಗೆ ₹ 2,000 ಸಹಾಯಧನ ಘೋಷಿಸಿದ್ದು, ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅದನ್ನು ಪಡೆಯಬಹುದು. ಬರುವ ಸೋಮವಾರ ಕಾರ್ಮಿಕ ಇಲಾಖೆಯಿಂದ ಆಯ್ದ 23 ಕಾರ್ಮಿಕರಿಗೆ ಸಾಧನ ಸಲಕರಣೆಗಳ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಕಾರ್ಮಿಕ ಇಲಾಖೆ ಅಧಿಕಾರಿ ಶಿಲ್ಪಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.