ADVERTISEMENT

ಆಸ್ಪತ್ರೆ ಮೇಲ್ದರ್ಜೆಗೆ: ಬರಗೂರು ಬಂದ್

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 4:35 IST
Last Updated 5 ಅಕ್ಟೋಬರ್ 2012, 4:35 IST

ಶಿರಾ: ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಬರಗೂರಿನಲ್ಲಿ ಗುರುವಾರ ಬಂದ್ ಆಚರಿಸಲಾಯಿತು.

ಜಯಕರ್ನಾಟಕ ಸೇರಿದಂತೆ ಕನ್ನಡ ಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಕರೆ ನೀಡಿದ್ದ ಬಂದ್‌ಗೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ಸಿಕ್ಕಿತು.

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಬೇಕು. ಗ್ರಾಮದ ನೈರ್ಮಲ್ಯ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಶಾಲೆಗಳು, ಅಂಗಡಿಗಳು, ಬ್ಯಾಂಕ್‌ಗಳು ಮುಚ್ಚಿದ್ದವು.

ಬಸ್ ಸಂಚಾರ ಸ್ಥಗಿತವಾಗಿತ್ತು. ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗ್ರಾಮದ ಆಂಜನೇಯ ಸ್ವಾಮಿ ದೇಗುಲದಿಂದ ಆರೋಗ್ಯ ಕೇಂದ್ರದವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು.

ಮಧ್ಯಾಹ್ನ 1.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಮಾಧವ್ ಪಾಟೀಲ್ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಜಿಲ್ಲಾ ಪಂಚಾಯಿತಿಗೆ ಮನವಿ ಮಾಡಲಾಗುವುದು. 108 ವಾಹನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಜೆ.ತಿಮ್ಮರಾಜು, ವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಯಕರ್ನಾಟಕ ಹೊಬಳಿ ಘಟಕ ಅಧ್ಯಕ್ಷ ಹನುಮಂತರಾಯಪ್ಪ, ವಿದ್ಯಾರ್ಥಿ ಘಟಕದ ಅಧ್ಯಕ್ಷ ರಾಕೇಶ್, ಮಾನವ ಹಕ್ಕುಗಳ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮುಬಾರಕ್ ಪಾಷ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಯ ಹಲವು ಕಾರ್ಯಕರ್ತರು, ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.