ADVERTISEMENT

ಉದ್ಯೋಗ ಮೇಳ: ಜಯಚಂದ್ರ ಭರವಸೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2011, 5:30 IST
Last Updated 1 ಫೆಬ್ರುವರಿ 2011, 5:30 IST

ಶಿರಾ: ತಾಲ್ಲೂಕು ಬರಪೀಡಿತ ಪ್ರದೇಶ. ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿ, ಉನ್ನತ ವ್ಯಾಸಂಗಕ್ಕೆ ಹೋಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲ  ರೀತಿಯ ಮೂಲ ಸೌಕರ್ಯ  ಒದಗಿಸಲಾಗುವುದು. ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಮುಂದಿನ ವರ್ಷ ಉದ್ಯೋಗ ಮೇಳ ನಡೆಸಿ, ಯುವಕರಿಗೆ ಉದ್ಯೋಗ ದೊರಕಿಸಲಾಗುವುದು ಎಂದು ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ ಭರವಸೆ ನಿಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆ,ಕ್ರೀಡೆ ಹಾಗೂ ಎನ್‌ಎಸ್‌ಎಸ್  ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಬಿ.ವಿ.ಜನಾರ್ದನಯ್ಯ ಮಾತನಾಡಿ, ಕಾಲೇಜಿನಲ್ಲಿರುವ ಮೂಲಸೌಲಭ್ಯಗಳ ಕೊರತೆಯನ್ನು ಶಾಸಕರ ಗಮನಕ್ಕೆ ತಂದರು.

ಪರೀಕ್ಷೆಗಳು ಹತ್ತಿರ ಬರುತ್ತಿರುವುದನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು, ಕಾಲೇಜಿಗೆ ಉತ್ತಮ ಫಲಿತಾಂಶ ತಂದುಕೊಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.ಹಲವು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಹಶೀಲ್ದಾರ್ ವಿ.ಪಾತರಾಜು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಸ್.ಎನ್.ಕೃಷ್ಣಯ್ಯ, ಡಿ.ಸಿ.ಅಶೋಕ್, ಶೋಭಾ ನಾಗರಾಜ್, ಎಂ.ಎನ್.ರಾಜು  ಇನ್ನಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.