ತುಮಕೂರು: ಭಾರತ ನಿರ್ಮಾಣ ಯಾತ್ರೆ ಅಂಗವಾಗಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆಗೆ ಭಾನುವಾರ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಚಾಲನೆ ದೊರೆಯಿತು.
ಶಾಸಕ ಡಾ.ರಫೀಕ್ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹ್ಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ಹಾಗೂ ಮುಖಂಡರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಕೈಗೊಂಡಿರುವ ಸಾಧನೆಗಳನ್ನು ಮನೆ ಮನೆಗೆ ತಿಳಿಸುವ ಸಲುವಾಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜನಪರ ಯೋಜನೆಗಳ ಬಗ್ಗೆ ತಿಳಿವಳಿಕೆ ಇಲ್ಲದ ಕೆಲವರು ಮತದಾರರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಶಾಸಕ ಡಾ.ರಫೀಕ್ ಅಹಮದ್ ಸುದ್ದಿಗಾರರಿಗೆ ತಿಳಿಸಿದರು.
ಪಾದಯಾತ್ರೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಆರಂಭವಾಯಿತು. ಕೇವಲ 150 ಮಂದಿಯಷ್ಟು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಹೊರತುಪಡಿಸಿ ಬೇರಾರು ಭಾಗವಹಿಸಿರಲಿಲ್ಲ. ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪಾದಯಾತ್ರೆಗೆ ಬಂದು ಸೇರ್ಪಡೆ ಆಗಲಿದ್ದಾರೆ ಎಂದು ಸ್ಥಳದಲ್ಲಿದ್ದ ಕಾರ್ಯಕರ್ತರು ಹೇಳಿದರು.
ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಾದಯಾತ್ರೆ ಚಿಕ್ಕಪೇಟೆ, ಮಂಡಿಪೇಟೆ, ಗುಬ್ಬಿ ಗೇಟ್ ಮೂಲಕ ಬಿ.ಎಚ್.ರಸ್ತೆ, ಬಟವಾಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿತು. ಕಾಂಗ್ರೆಸ್ ಸರ್ಕಾರದ ಸಾಧನೆ ಬಿಂಬಿಸುವ ಯೋಜನೆಗಳ ಪುಸ್ತಕ ಹಾಗೂ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚಿ, ಮತಯಾಚಿಸಲಾಯಿತು. ಮಧ್ಯಾಹ್ನ ಮಧುಗಿರಿಯಲ್ಲಿ ಪಾದಯಾತ್ರೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.