ಮಧುಗಿರಿ: ‘ಕಾಂಗ್ರೆಸ್ ಪಕ್ಷ ಎಂದರೆ ಆಗ ಕಳ್ಳರ ಪಕ್ಷ, ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆದು ಹಾಕಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರ ಮೇಲೆ ಮುಖಂಡರು ಕಣ್ಣು ಇಟ್ಟು ಪಕ್ಷದಿಂದ ಹೊರಹಾಕುತ್ತಾರೆ’ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
ತಾಲ್ಲೂಕಿನ ದೊಡ್ಡೇರಿ ಹೋಬಳಿಯ ತಿಮ್ಲಾಪುರ ಗ್ರಾಮದಲ್ಲಿ ಬುಧವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಾನು ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಕೂಡ ಕಾಂಗ್ರೆಸ್ ಪಕ್ಷದಿಂದ ಹೊರಹಾಕಿದರು. ಆಗ ಜೆಡಿಎಸ್ ಪಕ್ಷಕ್ಕೆ ಬಂದು ಬೆಳ್ಳಾವಿ ಕ್ಷೇತ್ರದಿಂದ ಸ್ಪರ್ಧಿಸಿದಾಗ ದೊಡ್ಡೇರಿ ಕ್ಷೇತ್ರದ ಜನರು ಅತಿ ಹೆಚ್ಚು ಮತಗಳನ್ನು ಕೊಟ್ಟು ರಾಜಕೀಯವಾಗಿ ಪುನರ್ಜನ್ಮ ನೀಡಿದ್ದರು. ಮುಂದಿನ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಲ್ಲಿ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ - ಕಾರ್ಯಗಳನ್ನು ಮಾಡಿರುವುದರಿಂದ ಜನರ ಆಶೀರ್ವಾದ ನನ್ನ ಮೇಲಿದೆ’ ಎಂದರು.
ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯ ಚೌಡಪ್ಪ , ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸದಸ್ಯ ದೊಡ್ಡಯ್ಯ, ಎಪಿಎಂಸಿ ಅಧ್ಯಕ್ಷ ಪಿ.ಟಿ.ಗೋವಿಂದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ತಿಪ್ಪೇಸ್ವಾಮಿ ಮುಖಂಡ ಗುಟ್ಟೆ ಚಿಕ್ಕರಂಗಪ್ಪ, ಎ.ಡಿ.ಬಲರಾಮಯ್ಯ ಇದ್ದರು.
*
ರಾಜ್ಯದಲ್ಲಿ ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ ಹಾಗೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತ್ರ ಮತ ಪಡೆಯಲು ಶಕ್ತಿ ಇರೋದು. ಮತ್ಯಾವ ನಾಯಕನಿಗೂ ಶಕ್ತಿ ಇಲ್ಲ
ಕೆ.ಎನ್.ರಾಜಣ್ಣ, ಶಾಸಕರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.