ADVERTISEMENT

ಕಾರ್ಮಿಕರ ಸಮಸ್ಯೆ ಪರಿಹರಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2012, 9:40 IST
Last Updated 22 ಡಿಸೆಂಬರ್ 2012, 9:40 IST

ತುಮಕೂರು: ಕಟ್ಟಡ ಕಾರ್ಮಿಕರು ಹಲ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಮಿಕರ ಹಿತ ಕಾಪಾಡುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಚ್.ಬಿ.ಪ್ರಭಾಕರ ಶಾಸ್ತ್ರಿ ಇಲ್ಲಿ ಶುಕ್ರವಾರ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ- 1996ರ ಕುರಿತು ಕಟ್ಟಡ ಕಾರ್ಮಿಕರ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಿರ್ಮಾಣ ಕ್ಷೇತ್ರವನ್ನು ಒಂದು ಉದ್ಯಮವಾಗಿ ಪರಿಗಣಿಸಿ ಅಗತ್ಯ ರೂಪುರೇಷೆಗಳನ್ನು ತಯಾರಿಸಬೇಕು. ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುವುದರಿಂದ ಕಟ್ಟಡ ಕಾರ್ಮಿಕರಲ್ಲಿ ಉತ್ತೇಜನಕಾರಿ ಬೆಳವಣಿಗೆ ಕಾಣಬಹುದು ಎಂದು ತಿಳಿಸಿದರು.
ಈಚೆಗೆ ಮಾನವ ಸಂಪನ್ಮೂಲ ಹೆಚ್ಚಿರುವ ರಾಷ್ಟ್ರದಲ್ಲಿ ಕೋಟ್ಯಂತರ ಜನತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಮಿಕರ ಕಲ್ಯಾಣಕ್ಕಾಗಿ ಹೇಳಿಕೊಳ್ಳುವಂತಹ ಸ್ಪಂದನೆ ದೊರೆತಿಲ್ಲ ಎಂದು ವಿಷಾದಿಸಿದರು.

ನ್ಯಾಯಾಧೀಶ ಸದಾನಂದ ಎಂ.ದೊಡ್ಡಮನಿ, ಕಾರ್ಮಿಕ ಇಲಾಖೆ ಜಂಟಿ ಕಾರ್ಯದರ್ಶಿ ಜಯದೇವಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಎ.ಪಿ.ಪುಂಡಲೀಕರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಾಸಂತಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.