ADVERTISEMENT

ಕೌಶಲ ಮೈಗೂಡಿಸಿಕೊಳ್ಳಿ: ಡಾ.ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 10:10 IST
Last Updated 13 ಸೆಪ್ಟೆಂಬರ್ 2011, 10:10 IST

ತುಮಕೂರು: ವೃತ್ತಿ ಬೇಡುವ ಕೌಶಲಗಳು ಕಾಲಕ್ಕೆ ಅನುಗುಣವಾಗಿ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ಮೃದು ಕೌಶಲಗಳಾದ ಭಾಷೆ, ಸಂವಹನ ಕಲೆಗಳನ್ನು ಸಮರ್ಥವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಐಎಸ್‌ಟಿಇ ಅಧ್ಯಕ್ಷ ಡಾ.ಎನ್.ಆರ್.ಶೆಟ್ಟಿ ತಿಳಿಸಿದರು.

ನಗರದ ಸಿದ್ಧಾರ್ಥ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಬಿಇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಮೊದಲ ದಿನದಿಂದಲೇ ಮೌಲ್ಯಮಾಪನಕ್ಕೆ ಒಳಗಾಗುತ್ತೀರಿ. ತಂಡದಲ್ಲಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.

ಪ್ರಾಂಶುಪಾಲ ಡಾ.ಕೆ.ಎ.ಕೃಷ್ಣಮೂರ್ತಿ ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣ ಆಯ್ಕೆ ಮಾಡಿಕೊಂಡವರು ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಮಹತ್ವದ ಅನ್ವೇಷಣೆಗೆ ಮುಂದಾಗಬೇಕಿದೆ ಎಂದರು.

ಆಡಳಿತಾಧಿಕಾರಿ ಪ್ರೊ.ಸಿ.ಎನ್.ನರಸಿಂಹಮೂರ್ತಿ ಮಾತನಾಡಿ, ಸಿದ್ಧಾರ್ಥ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ. ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡುವ ಬಹುತೇಕ ವಿದ್ಯಾರ್ಥಿಗಳು ಉತ್ತಮ ಕಂಪೆನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದು, ಸಂಸ್ಥೆಯು ಉತ್ತಮ ಹೆಸರನ್ನು ಹೊಂದಿದೆ ಎಂದು ಹೇಳಿಸದರು.

ಪ್ರೊ.ಎಸ್.ಎನ್.ಕೇಶವಮೂರ್ತಿ, ಪ್ರೊ.ಎಚ್.ಪಿ. ಸುದರ್ಶನ್, ಪ್ರೊ.ಎಂ.ಝೆಡ್.ಕುರಿಯನ್ ಮತ್ತಿತರರು ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.