ADVERTISEMENT

ಕ್ರೀಡಾಂಗಣ ಮೆಟ್ಟಿಲು ಕುಸಿತ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 8:20 IST
Last Updated 4 ಆಗಸ್ಟ್ 2012, 8:20 IST

ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದ ಕಟ್ಟಡದ ಮೆಟ್ಟಿಲು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿದ್ದ ಸಂದರ್ಭದಲ್ಲೇ ಕುಸಿದು ಬಿದ್ದ ಆತಂಕಕಾರಿ ಘಟನೆ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಮೆಟ್ಟಿಲು ಹತ್ತುತ್ತಿದ್ದ ನಗರದ ಸೀತಾ ಪ್ರೌಢಶಾಲೆ ವಿದ್ಯಾರ್ಥಿಗಳಾದ ರವಿಕುಮಾರ್, ಯಶೋಧ, ವಿಜಯಲಕ್ಷ್ಮೀ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎಂ.ಜಿ. ಕ್ರೀಡಾಂಗಣದಲ್ಲಿಯೇ ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಚೇರಿ ಇದೆ. ಇದೇ ಕಟ್ಟಡದ ಬಾಲ್ಕಾನಿಯಲ್ಲಿ ಕ್ರೀಡಾಕೂಟಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಆದರೆ ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿದೆ. ಕಟ್ಟಡ ದುರಸ್ತಿ ಮಾಡುವಂತೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ಆಗಸ್ಟ್ 15ರಂದು ಕ್ರೀಡಾಂಗಣದಲ್ಲಿ ಸಾವಿರಾರು ಮಂದಿ ಸೇರುತ್ತಿದ್ದು, ಅವಘಡ ಸಂಭವಿಸಿದರೆ ಅಪಾರ ಹಾನಿಯಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕು ಹೋರಾಟಗಾರ ಮಾವಿನಹಳ್ಳಿ ಸಿದ್ದಲಿಂಗೇಗೌಡ ಅವರು ಕ್ರೀಡಾ ಇಲಾಖೆಗೆ ಪತ್ರ ಬರೆದು ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಗಮನ ಸೆಳೆದಿದ್ದರು. ಕ್ರೀಡಾ ಇಲಾಖೆಯು ಜಿಲ್ಲಾಧಿಕಾರಿಗೆ ಪತ್ರ ಬರೆದು ಕಟ್ಟಡ ದುರಸ್ತಿ ಮಾಡುವಂತೆ ಸೂಚಿಸಿತ್ತು. ಆದರೆ ಇದುವರೆಗೆ ಕಟ್ಟಡ ದುರಸ್ತಿಗೊಂಡಿಲ್ಲ. ಈ ಅವಘಡ ನಡೆದ ನಡೆದ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.