ತುಮಕೂರು: ‘ನಮ್ಮ ಮತ ಮಾರಾಟಕ್ಕಿಲ್ಲ’ ಎನ್ನುವ ಜಾಗೃತಿ ಅಭಿಯಾನವನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ರಾಜ್ಯದಾದ್ಯಂತ ಪ್ರಾರಂಭಿಸಿದ್ದು, ಬುಧವಾರ ಜಿಲ್ಲೆಯಲ್ಲಿ ಸಂಸ್ಥೆಯಿಂದ ಸ್ಟಿಕ್ಕರ್ಗಳನ್ನು ಬಿಡುಗಡೆ ಮಾಡಲಾಯಿತು.
ತುಮಕೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 3,800 ಪ್ರಗತಿ ಬಂಧು ಸ್ವಸಹಾಯ ಸಂಘಗಳು ಇವೆ. ಅಲ್ಲದೆ ಜಿಲ್ಲೆಯ ಭಾಗ 1ರಲ್ಲಿ 15 ಸಾವಿರ ಸಂಘಗಳಿವೆ. ಒಂದೂವರೆ ಲಕ್ಷ ಸದಸ್ಯರು ಇದ್ದಾರೆ. ಈ ಸದಸ್ಯರ ಮನೆಗಳ ಬಾಗಿಲುಗಳಿಗೆ ‘ನಮ್ಮ ಮತ ಮಾರಾಟಕ್ಕಿಲ್ಲ’ ಎನ್ನುವ ಸ್ಟಿಕ್ಕರ್ ಅಂಟಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಸಂಸ್ಥೆ ಜಿಲ್ಲಾ ನಿರ್ದೇಶಕ ರಾಧಾಕೃಷ್ಣ ರಾವ್ ತಿಳಿಸಿದರು.
ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಶ್ರೀಕ್ಷೇತ್ರದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಘಗಳನ್ನೇ ದೃಷ್ಟಿಯಲ್ಲಿ ಇಟ್ಟುಕೊಂಡು ಕೆಲವರು ಆಮಿಷ ತೋರಿಸುತ್ತಿದ್ದಾರೆ. ಒಂದು ದಿನದ ಆಮಿಷಕ್ಕೆ ಬಲಿಯಾದರೆ ರಾಜ್ಯದ ಸುರಕ್ಷತೆ ಕಷ್ಟ. ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಯೋಚಿಸಿ ಮತದಾನ ಮಾಡಬೇಕು ಎಂದು ಹೇಳಿದರು. ಪ್ರತಿ ಜಿಲ್ಲೆಯಲ್ಲಿಯೂ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಡಾ.ಸಂಜಯ್ ನಾಯಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.