ಶಿರಾ: ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುವವರೆಗೂ ರೈತರು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು ಹೇಳಿದರು.
ತಾಲ್ಲೂಕಿನ ವಾಜರಹಳ್ಳಿ ಗ್ರಾಮದಲ್ಲಿ ಈಚೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ರೈತರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇದರಲ್ಲಿ ಮಾರುಕಟ್ಟೆ ಸಮಸ್ಯೆ ಸಹ ಒಂದಾಗಿದೆ. ರೈತರ ಶ್ರಮಕ್ಕೆ ಬೆಲೆ ಇಲ್ಲದಂತಾಗಿದೆ. ಸೂಕ್ತ ಬೆಲೆ ದೊರೆಯದೆ ರೈತರು ಸಾಲಗಾರರಾಗಿ ಇಂದು ಆತ್ಮಹತ್ಯೆಯ ಕಡೆ ಮುಖ ಮಾಡುವಂತಾಗಿದೆ. ರೈತರು ಸಂಘಟಿತರಾಗಿ ಹೋರಾಟ ನಡೆಸಿದಾಗ ಮಾತ್ರ ರೈತರ ಬದುಕು ಸುಧಾರಿಸುವುದು ಎಂದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಲಕ್ಷ್ಮಣಗೌಡ ಮಾತನಾಡಿ, ಸರ್ಕಾರಗಳಿಗೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ರೈತರ ಹಿತಕಾಯುವ ದೃಷ್ಟಿಯಿಂದ ರೈತರನ್ನು ಸಂಘಟಿಸುವ ಕೆಲಸವನ್ನು ರೈತ ಸಂಘ ಮಾಡುತ್ತಿದೆ ಎಂದರು.
ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ, ರಂಗಹನುಮಯ್ಯ, ಲೋಕೇಶ್, ಗುರುಚನ್ನಬಸಪ್ಪ, ಜಯರಾಮಯ್ಯ, ಜಗದೀಶ್, ವೀರನಾಗಪ್ಪ, ಮುಕುಂದಪ್ಪ, ನಾಗರಾಜು, ಶಾಂತರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಭೂತೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.