ತುಮಕೂರು: ಲೋಕಸಭೆಯ ಮಾಜಿ ಉಪಸಭಾಧ್ಯಕ್ಷ, ಜನ ಸಂಘದ ನಾಯಕ ಎಸ್.ಮಲ್ಲಿಕಾರ್ಜುನಯ್ಯ ನಿಧನಕ್ಕೆ ರಾಜಕಾರಣಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಲ್ಲಿಕಾರ್ಜುನಯ್ಯ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಅವರ ಸಾವಿನಿಂದ ಸಾರ್ವಜನಿಕ ಜೀವನಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಸಿದ್ದಗಂಗ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ ಹೇಳಿದ್ದಾರೆ.
ಕರ್ನಾಟಕ ಒಬ್ಬ ಶ್ರೇಷ್ಠ ರಾಜಕಾರಣಿ ಕಳೆದುಕೊಂಡು ಬಡವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಎಸ್.ಮಲ್ಲಿಕಾರ್ಜುನಯ್ಯ ಉತ್ತಮ ಸಂಸದೀಯ ಪಟುವಾಗಿದ್ದರು ಎಂದು ಬಾಳೆಹೊನ್ನೂರು ರಂಭಾಪುರಿ ಮಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ಎಸ್.ಮಲ್ಲಿಕಾರ್ಜುನಯ್ಯ ಜಿಲ್ಲೆಯ ಹಿರಿಯ ಮತ್ತು ಮೇರು ರಾಜಕಾರಣಿಯಾಗಿದ್ದರು ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸ್ಮರಿಸಿದ್ದಾರೆ.
ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಅವರ ನಿಧನದಿಂದ ಮೌಲ್ಯಧಾರಿತ ರಾಜಕಾರಣ ಮಾಡಿದ, ಸರಳ, ಸಜ್ಜನಿಕೆಯ, ಜನಪರಕಾಳಜಿಯ ಹಿರಿಯ ಚೇತನವನ್ನು ಕಳೆದುಕೊಂಡಂತಾಗಿದೆ ಎಂದು ಡಾ.ಎ.ಎಚ್.ಶಿವಯೋಗಿಸ್ವಾಮಿ ಹೇಳಿದ್ದಾರೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಸಾಗರನಹಳ್ಳಿ ಪ್ರಭು, ಗೌರವ ಕಾರ್ಯದರ್ಶಿ ಅಬ್ದುಲ್ ಜಲೀಲ್ ಸಂತಾಪ ಸೂಚಿಸಿದ್ದಾರೆ.
ಗಣ್ಯರಿಂದ ದರ್ಶನ: ಮಲ್ಲಿಕಾರ್ಜುನಯ್ಯ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಗೌರಿಶಂಕರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಪಡೆದರು.
ಸಂಸದ ಜಿ.ಎಸ್.ಬಸವರಾಜ್, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಸುರೇಶ್ಬಾಬು, ಸಿ.ಟಿ.ರವಿ, ಸುರೇಶ್ಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಎಂ.ಡಿ. ಲಕ್ಷ್ಮೀನಾರಾಯಣ್, ಡಾ.ಎಂ.ಆರ್.ಹುಲಿನಾಯ್ಕರ್ ಇನ್ನಿತರರು ಅಂತಿಮ ನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.