ADVERTISEMENT

ಮೋಸ ಮಾಡಿದ ಬಿಜೆಪಿ: ಎಚ್‌ಡಿಕೆ ಟೀಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2012, 10:00 IST
Last Updated 17 ಜುಲೈ 2012, 10:00 IST

ಮಧುಗಿರಿ: ರಾಜ್ಯವನ್ನು ರಾಮರಾಜ್ಯ ಮಾಡುವ ಭರವಸೆ ನೀಡಿ ಅಧಿಕಾರ ಪಡೆದ ಬಿಜೆಪಿ ಜನರಿಗೆ ಮೋಸಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಪಟ್ಟಣದ ಲಾಲ್‌ಬಹದ್ದೂರ್‌ಶಾಸ್ತ್ರಿ ಮೈದಾನದಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಮಸ್ಯೆ ಸೃಷ್ಟಿಸುವ ಅನಾಗರಿಕ ಸರ್ಕಾರದಿಂದ ಜನ ರೋಸಿ ಹೋಗಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳ ಪಾಲಿಗೆ ವರ್ಗಾವಣೆ ಎನ್ನುವುದು ತೂಗುಗತ್ತಿಯಂತೆ ಬೆದರಿಕೆ ಒಡ್ಡಿತ್ತು. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಹಣಗಳಿಕೆಯಲ್ಲಿ ನಿರತರಾಗಿದ್ದಾರೆ. ನನ್ನ ಅಲ್ಪಾವಧಿ ಸರ್ಕಾರ ಜಾರಿಗೆ ತಂದ ಜನಪರ ಕಾರ್ಯಕ್ರಮಗಳನ್ನು ಇಂದಿಗೂ ಜನರು ಸ್ಮರಿಸುತ್ತಿದ್ದಾರೆ ಎಂದರು.

ಆಂತರಿಕ ಕಲಹದಿಂದ ಡಿಸೆಂಬರ್ ವೇಳೆಗೆ ರಾಜ್ಯ ಬಿಜೆಪಿ ಸರ್ಕಾರ ಪತನವಾಗಲಿದೆ. ಮುಂದಿನ ಸಂಕ್ರಾಂತಿ ಹೊತ್ತಿಗೆ ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ, ತುಮಕೂರು- ಚಿಕ್ಕಬಳ್ಳಾಪುರ- ಕೋಲಾರ ಜಿಲ್ಲೆಯ ನೀರಾವರಿ ಸಮಸ್ಯೆ ಪರಿಹರಿಸಲಾಗುವುದು. ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಲಗುವುದು. ರೈತರ ಸಾಲಮನ್ನಾ, ಸಬ್ಸಿಡಿ ದರದಲ್ಲಿ  ರಸಗೊಬ್ಬರ ಪೂರೈಕೆ ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಶಾಸಕಿ ಅನಿತಾ ಕುಮಾರಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಜಾತಿ ಹಾಗೂ ಪಕ್ಷಭೇದವಿಲ್ಲದೆ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಹುಲಿನಾಯ್ಕರ್, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಸುರೇಶ್‌ಬಾಬು, ಮಾಜಿ ಶಾಸಕರಾದ ಸತ್ಯನಾರಾಯಣ, ಚನ್ನಿಗಪ್ಪ, ಮುದ್ದಹನುಮೇಗೌಡ, ತಿಮ್ಮರಾಯಪ್ಪ, ಡಿ.ಸಿ.ಗೌರಿಶಂಕರ್, ಆನಂದರವಿ, ಬಿ.ಎನ್.ಶಿವಣ್ಣ, ಬಿ.ವಿ.ನಾಗರಾಜಪ್ಪ, ಜಿ.ಜೆ.ರಾಜಣ್ಣ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.