ADVERTISEMENT

ಯುವ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 8:15 IST
Last Updated 4 ಆಗಸ್ಟ್ 2012, 8:15 IST

ತುಮಕೂರು: ನಗರದ ಟೌನ್‌ಹಾಲ್ ವೃತ್ತದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ನಡೆದ ದಾಳಿ ವಿರೋಧಿಸಿ ಪ್ರತಿಭಟನೆ ನಡೆಸಿದರು.

ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ದಾಳಿ ನಡೆಸುವುದು, ಯುವತಿಯರನ್ನು ಅಸಭ್ಯವಾಗಿ ಎಳೆದಾಡುವುದು, ಹುಟ್ಟುಹಬ್ಬದ ಆಚರಣೆಯನ್ನು ಸಹ ಅಕ್ರಮ ಎಂದು ಪರಿಗಣಿಸಿ ಅಸಭ್ಯವಾಗಿ ವರ್ತಿಸುವುದು ಮಂಗಳೂರಿನಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಇದರ ಹಿಂದೆ ಕೆಲವು ರಾಜಕೀಯ ಪ್ರೇರಿತ ಸಂಘಟನೆಗಳ ಕೈವಾಡವಿದೆ. ಈ ಬಗ್ಗೆ ತನಿಖೆ ನಡೆಸಿ ನಿರಂತರವಾಗಿ ನಡೆಯುವ ದಾಳಿಗಳ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಿಪ್ತವಾಗಿ ವರ್ತಿಸಿರುವುದು ಕಂಡುಬಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಿ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಬಂಧಿಸಿದರೂ ಶಿಕ್ಷೆ ನೀಡದ ಕಾರಣ ಮತ್ತೆಮತ್ತೆ ದಾಳಿ ನಡೆಯುತ್ತಿದೆ. ಇದರಲ್ಲಿ ಮೂಲಭೂತವಾದಿಗಳ ಸ್ವಹಿತಾಸಕ್ತಿ ಅಡಗಿದೆ. ಹಿಂದೂ ಜಾಗರಣ ವೇದಿಕೆ, ಭಜರಂಗದಳ ಮುಂತಾದ ಸಂಘಟನೆಗಳ ಕೈವಾಡವಿದೆ ಎಂದು ಆಪಾದಿಸಿದರು.

ಮುಖಂಡರಾದ ರಾಜೇಶ್ ದೊಡ್ಮನೆ, ರವಿಕಿರಣ್, ಸಂದೀಪ್, ಲಕ್ಕಪ್ಪ, ಜಿ.ಶ್ರೀನಿವಾಸ್, ಆರ್.ರಾಜೇಂದ್ರ, ರಾಘವೇಂದ್ರಸ್ವಾಮಿ, ಶಶಿಧರ್, ರವಿಕುಮಾರ್ ಮೋಹನ್, ದಿನೇಶ್‌ಬಾಬು, ಶಿವಪ್ರಸಾದ್, ಶರತ್, ಮುಬಾರಕ್  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

`ಗ್ರಾಮಾಂತರದಿಂದ ಸ್ಪರ್ಧೆ~

ಮಧುಗಿರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

ರಾಜಕೀಯವಾಗಿ ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಅಭಿಮಾನಿಗಳು, ಹಿತೈಷಿಗಳಿರುವುದರಿಂದ ಬರುತ್ತೇನೆ. ಮುಂದಿನ ಚುನಾವಣೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.