ADVERTISEMENT

ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 6:25 IST
Last Updated 3 ಅಕ್ಟೋಬರ್ 2012, 6:25 IST

ಚಿಕ್ಕಬಳ್ಳಾಪುರ: ಸಮರ್ಪಕ ವಿದ್ಯುತ್ ಪೂರೈಕೆ, ಅಕ್ರಮ-ಸಕ್ರಮ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಸೋಮವಾರ ನಗರದ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದಿಂದ ಬೆಸ್ಕಾಂ ಕಚೇರಿವರೆಗೆ ಮರವಣಿಗೆ ನಡೆಸಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದು, ಇದರ ನಿವಾರಣೆಗೆ ಬೆಸ್ಕಾಂ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆ ಮುಖಂಡ ಚನ್ನರಾಯಪ್ಪ ಮಾತನಾಡಿ, ಮೂಲಸೌಕರ್ಯ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಿದರೆ ಜೀವನ ಮಾಡುವುದಾದರೂ ಹೇಗೆ? ಕೃಷಿ ಚಟುವಟಿಕೆ ಇಲ್ಲದೆ, ಬೆಳಕೂ ಇಲ್ಲದೆ ಸಂಕಷ್ಟದಲ್ಲೆ ಬದುಕುವ ಪರಿಸ್ಥಿತಿಯಿದೆ. ಭರವಸೆಗಳು ನೀಡುವ ಬದಲು ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ. ವಿದ್ಯುತ್ ಸಮರ್ಪಕವಾಗಿ ಪೂರೈಸಲು ವಿಫಲವಾಗಿರುವ ಬಿಜೆಪಿ ಈ ಕೂಡಲೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದರು. ಸಂಘಟನೆ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ, ಕೃಷ್ಣ, ಶ್ರೀನಿವಾಸ್, ಜಿ.ವಿ.ಕೆಂಪಣ್ಣ, ವೆಂಕಟೇಶ್ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.