ತುಮಕೂರು: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಕೇಂದ್ರ ಸರ್ಕಾರ ದೇಶದ ಕಾನೂನಿಗೆ ತಿದ್ದುಪಡಿ ತರಬೇಕೆಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಪ್ರತಿ 36 ನಿಮಿಷಕ್ಕೆ ಒಬ್ಬ ಮಹಿಳೆ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣ ನಡೆಯುತ್ತಿದೆ. ಒಂದು ವರ್ಷದ ಅವಧಿಯಲ್ಲಿ 30.942 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಮಹಿಳಾ ದೌರ್ಜನ್ಯ ತಡೆಯುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ 2013 ಜನವರಿಯಿಂದ ಜೂನ್ವರೆಗೆ 457 ಪ್ರಕರಣಗಳು ವರದಿಯಾಗಿದ್ದು, ಪ್ರತಿದಿನ ಎರಡು ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಭಯ ಹಾಗೂ ಆತಂಕದಲ್ಲಿ ಬದುಕುತ್ತಿದ್ದು, ದೌರ್ಜನ್ಯ ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಬಿಜೆಪಿ ಆರೋಪಿಸಿದರು.
ದೆಹಲಿ, ಮುಂಬೈ, ಬೆಂಗಳೂರು ಹಾಗೂ ಉಡುಪಿಯಲ್ಲಿ ಯುವತಿಯರ ಮೇಲೆ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳು ಇದಕ್ಕೆ ಸ್ಪಷ್ಟ ನಿದರ್ಶನವಾಗಿವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿದರೂ ದೌರ್ಜನ್ಯ ನಿಂತಿಲ್ಲ. ಹಾಗಾಗಿ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆಗೆ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಮಹಿಳಾ ಪೊಲೀಸರನ್ನು ಹೆಚ್ಚು ನಿಯೋಜಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.