ADVERTISEMENT

ಸುರೇಶಗೌಡರಿಗೆ ಸಚಿವ ಸ್ಥಾನ: ಬಿಎಸ್‌ವೈ

ಬೆಳ್ಳಾವಿ, ಹೊನ್ನುಡಿಕೆಗಳಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆ; ಸುರಿವ ಮಳೆಯಲ್ಲೂ ಕದಲದ ಜನರು

​ಪ್ರಜಾವಾಣಿ ವಾರ್ತೆ
Published 4 ಮೇ 2018, 12:21 IST
Last Updated 4 ಮೇ 2018, 12:21 IST
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್‌ಗೌಡ ಪರವಾಗಿ ಗುರುವಾರ ಬೆಳ್ಳಾವಿಯಲ್ಲಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್‌ಗೌಡ ಪರವಾಗಿ ಗುರುವಾರ ಬೆಳ್ಳಾವಿಯಲ್ಲಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು   

ತುಮಕೂರು: ಗ್ರಾಮಾಂತರ ಕ್ಷೇತ್ರದ ಜನರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಸುರೇಶ್‌ ಗೌಡ ಅವರನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ತಾಲ್ಲೂಕಿನ ಬೆಳ್ಳಾವಿ ಮತ್ತು ಹೊನ್ನುಡಿಕೆಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು. ಮೇ 17ರಂದು ಮುಖ್ಯಮಂತ್ರಿಯಾಗಿ ನಾನು ಪ್ರಮಾಣ ವಚನ ಸ್ವೀಕರಿಸುತ್ತೇನೆ. ನನ್ನ ಜೊತೆಯಲ್ಲಿ ಸುರೇಶ್‌ಗೌಡ ಅವರು ಇರುತ್ತಾರೆ. ಅವರಿಗೆ ಪ್ರಮುಖವಾದ ಸಚಿವ ಸ್ಥಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ತುಮಕೂರು ಗ್ರಾಮಾಂತರದಲ್ಲಿ ಸುರೇಶ್‌ ಗೌಡ ಬಿಜೆಪಿ ಅಭ್ಯರ್ಥಿ ಅಲ್ಲ. ನಾನೇ ಎಂದು ಭಾವಿಸಿ ಬಿಜೆಪಿ ಬೆಂಬಲಿಸಿ. ಜಿಲ್ಲೆಯ 11 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳನ್ನು ಪಕ್ಷ ಗೆಲ್ಲಲಿದೆ ಎಂದರು.

ADVERTISEMENT

ಸಾಲ ಮನ್ನಾ: ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಲಾಗುವುದು. ಶುಕ್ರವಾರ ಬಿಡುಗಡೆಯಾಗಲಿರುವ ಪ್ರಣಾಳಿಕೆಯಲ್ಲೇ ಈ ವಿಚಾರ ಘೋಷಿಸುವ ಬಗ್ಗೆ ಚರ್ಚಿಸಲಾಗಿದೆ’ ಎಂದು ಹೇಳಿದರು.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲ ಮನ್ನಾ ಮಾಡಲು ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಿಲ್ಲ. ಬದಲಾಗಿ ರೈತರನ್ನು ಹಲವಾರು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು.

‘ಕಾಂಗ್ರೆಸ್‌ ಸರ್ಕಾರದ 5 ವರ್ಷದ ಅವಧಿಯಲ್ಲಿ ಕೊಲೆ ಮತ್ತು ಹಗರಣಗಳ ಸರಮಾಲೆಯೇ ನಡೆದಿದೆ. ಇದು ಹಗರಣಗಳ ಸರ್ಕಾರ’ ಎಂದು ಆರೋಪಿಸಿದರು.

ಹಿರಿಯ ಮುಖಂಡ ಜಿ.ಎಸ್‌.ಬಸವರಾಜ್ ಮಾತನಾಡಿದರು. ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಮ್ಮ ನಾಗರಾಜು,  ಗೂಳೂರು ಶಿವಕುಮಾರ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಬ್ಬಾಕ ರವಿ, ಹೆಬ್ಬೂರು ಬಿಜೆಪಿ ಮುಖಂಡ ಮಾರುತಿಗೌಡ ಇದ್ದರು.

ಸಮಗ್ರ ಅಭಿವೃದ್ಧಿಗೆ ಸಂಕಲ್ಪ

ಶಾಸಕ ಸುರೇಶ್‌ ಗೌಡ ಮಾತನಾಡಿ, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಗ್ರಾಮಾಂತರ ಕ್ಷೇತ್ರಕ್ಕೆ ಹಲವಾರು ಯೋಜನೆಯಲ್ಲಿ ಕೋಟಿಗಟ್ಟಲೆ ಅನುದಾನ ನೀಡಿದ್ದಾರೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ’ ಎಂದರು.

‘ಯಡಿಯೂರಪ್ಪ ಅವರು ತಂದೆ ಸಮಾನರಾಗಿದ್ದು, ನನಗೆ ಒಂದು ಕಣ್ಣು ಯಡಿಯೂರಪ್ಪ ಆದರೆ ಇನ್ನೊಂದು ಕಣ್ಣು ಬಿಜೆಪಿ. ಬಿಎಸ್‌ವೈ ಮುಖ್ಯಮಂತ್ರಿಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.