ADVERTISEMENT

ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2011, 8:40 IST
Last Updated 8 ಮಾರ್ಚ್ 2011, 8:40 IST
ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ   

ಕುಣಿಗಲ್: ಹದಗೆಟ್ಟ ರಾಜ್ಯ ಹೆದ್ದಾರಿ ದುರಸ್ತಿ ಸೇರಿದಂತೆ ಇತರ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಹುಲಿಯೂರುದುರ್ಗ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಹುಲಿಯೂರುದುರ್ಗದ ಸಂಪರ್ಕ ರಸ್ತೆಗಳು ಸೇರಿದಂತೆ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಸ್ಮಶಾನಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಈ ಬಂದ್‌ಗೆ ಕರೆ ನೀಡಲಾಗಿತ್ತು.

ಕರವೇ ಅಧ್ಯಕ್ಷ ಬಾಬು, ಜೆಡಿಎಸ್ ಮುಖಂಡ ಜಯರಾಮಯ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಾಬು, ಹುಲಿಯೂರುದುರ್ಗ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ಗುಂಡಿಗಳಿಂದ ಕೂಡಿದೆ. ಸಾರ್ವಜನಿಕರು ಓಡಾಡಲು, ವಾಹನ ಸಂಚಾರಕ್ಕೆ ಪ್ರಯಾಸ ಪಡಬೇಕಿದೆ. ನಿರಂತರವಾಗಿ ಈ ಮಾರ್ಗದಲ್ಲಿ ಸಣ್ಣಪುಟ್ಟ ಅಪಘಾತ ಸಂಭವಿಸುತ್ತವೇ ಇವೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಲೋಕೋಪಯೋಗಿ ಇಲಾಖೆ ಎಇಇ ಸುರೇಶ್, ಕೆಶಿಪ್ ಅಧಿಕಾರಿ ವೆಂಕಟೇಶ್, ಸಿಪಿಐ ಬಿ.ಕೆ.ಶೇಖರ್, ಪಿಎಸ್‌ಐಗಳಾದ ಕೃಷ್ಣಮೂರ್ತಿ, ಚನ್ನಯ್ಯಹಿರೇಮಠ್ ಅವರು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಈ ತಿಂಗಳ ಅಂತ್ಯದೊಳಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.