ADVERTISEMENT

ಮನೆ ಹಾನಿ ಸಂತ್ರಸ್ತರಿಗೆ ₹ 1 ಲಕ್ಷ ಪರಿಹಾರ

ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಆರ್‌. ಅಶೋಕ ಭೇಟಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 2:07 IST
Last Updated 25 ನವೆಂಬರ್ 2021, 2:07 IST
ಕುಣಿಗಲ್ ತಾಲ್ಲೂಕಿನ ಜಲಧಿಗೆರೆ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ರಾಗಿ ಬೆಳೆಯನ್ನು ಪರಿಶೀಲಿಸಿದ ಸಚಿವ ಆರ್. ಅಶೋಕ. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಉಪ ವಿಭಾಗಾಧಿಕಾರಿ ಅಜಯ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರಾಜಸುಲೋಚನಾ ಇದ್ದರು
ಕುಣಿಗಲ್ ತಾಲ್ಲೂಕಿನ ಜಲಧಿಗೆರೆ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ರಾಗಿ ಬೆಳೆಯನ್ನು ಪರಿಶೀಲಿಸಿದ ಸಚಿವ ಆರ್. ಅಶೋಕ. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಉಪ ವಿಭಾಗಾಧಿಕಾರಿ ಅಜಯ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರಾಜಸುಲೋಚನಾ ಇದ್ದರು   

ಕುಣಿಗಲ್: ‘ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 1 ಲಕ್ಷ ಮತ್ತು ನೀರು ನುಗ್ಗಿ ಹಾಳಾಗಿರುವ ಮನೆಗಳಿಗೆ ₹ 10 ಸಾವಿರ ಪರಿಹಾರ ನೀಡಲು ಸೂಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ತಾಲ್ಲೂಕಿನ ಜಲಧಿಗೆರೆ ಮತ್ತು ಬ್ಯಾಲದಲ್ಲಿ ಮಳೆಯಿಂದ ಹಾನಿಯಾಗಿರುವ ಬೆಳೆಗಳನ್ನು ಬುಧ
ವಾರ ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಎನ್.ಡಿ.ಆರ್.ಎಫ್‌ನಿಂದ ₹ 900 ಕೋಟಿ ಬಿಡುಗಡೆ ಕೋಡಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 5 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಾಶವಾಗಿದೆ. ಹತ್ತು ದಿನದಲ್ಲಿ ಬೆಳೆ ಹಾನಿ ವರದಿ ಸಲ್ಲಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಕಾಲಿಕ ಮಳೆಯಿಂದಾಗಿ ನಷ್ಟಕ್ಕೊಳಗಾಗಿರುವ ರೈತರಾಗಲಿ, ಮನೆ ಕಳೆದುಕೊಂಡವರಾಗಲಿ ಆತಂಕಪಡುವುದು ಬೇಡ. ಸರ್ಕಾರ ಬೆಳೆ ಹಾನಿಯಾದ ರೈತರ ನೆರವಿಗೆ ₹ 358 ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಬೆಳೆ ಪರಿಹಾರ ಧನ ನಿಗದಿಪಡಿಸಿದ್ದಾರೆ. ಪ್ರಸ್ತುತ ರಾಗಿ ಬೆಳೆಗೆ ಒಂದು ಹೆಕ್ಟೇರ್‌ಗೆ ₹ 6,800 ಪರಿಹಾರ ನೀಡಲಾಗುತ್ತಿದೆ. ಇದನ್ನು ₹ 20 ಸಾವಿರಕ್ಕೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆಗಳಿಗೆ ₹ 18 ಸಾವಿರ ನೀಡುತ್ತಿದ್ದು, ₹ 40 ಸಾವಿರಕ್ಕೇರಿಸಲು ಮನವಿ ಸಲ್ಲಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ವೈ.ಎಸ್, ಪಾಟೀಲ, ಉಪ ವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮಹಬಲೇಶ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರಾಜಸುಲೋಚನಾ, ಉಪ ನಿರ್ದೇಶಕಿ ದೀಪಶ್ರೀ, ಅಶೋಕ, ಸಹಾಯಕ ನಿರ್ದೇಶಕಿ ಸೌಮ್ಯಶ್ರೀ, ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ. ಕೃಷ್ಣಕುಮಾರ್ ಇದ್ದರು.

ಶಾಸಕರ ಮನವಿ: ಶಾಸಕ ಡಾ.ರಂಗನಾಥ್ ಜಲಧಿಗರೆಯಲ್ಲಿ ಸಚಿವ ಅಶೋಕ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ತಾಲ್ಲೂಕಿನಲ್ಲಿ ಶೇ 50ರಷ್ಟು ಬೆಳೆ ನಾಶವಾಗಿದೆ. ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಬೆಳೆ ಪರಿಹಾರ ಧನವನ್ನು ₹ 6,800ರಿಂದ ₹ 25 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.