ADVERTISEMENT

ಮಳೆ: ತುಮಕೂರು ಜಿಲ್ಲೆಯಲ್ಲಿ 310 ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 4:27 IST
Last Updated 21 ನವೆಂಬರ್ 2021, 4:27 IST

ತುಮಕೂರು: ಜಿಲ್ಲೆಯಲ್ಲಿ ಬೀಳುತ್ತಿರುವ ಸತತ ಮಳೆಯಿಂದಾಗಿ ಈವರೆಗೆ 310 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಒಬ್ಬರು ಸಾವನ್ನಪ್ಪಿದ್ದು, 32 ಜಾನುವಾರುಗಳು ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆ ಹಾನಿಗೆ ತುತ್ತಾಗಿದೆ. ತೋಟಗಾರಿಕಾ ಬೆಳೆಗೂ ಹಾನಿಯಾಗಿದ್ದು, ಹಾನಿ ಬಗ್ಗೆ ಅಧಿಕಾರಿಗಳು ಪರಿಶೀಲನೆ, ಸರ್ವೇ ಕಾರ್ಯ ನಡೆಸುತ್ತಿದ್ದಾರೆ ಎಂದು ಶನಿವಾರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಮಯದಲ್ಲಿ ತಿಳಿಸಿದರು.

ಮನೆಗಳಿಗೆ ಹಾನಿಯಾಗಿದ್ದರೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಛಾಯಾಚಿತ್ರ ತೆಗೆದು, ಅಗತ್ಯ ದಾಖಲೆಗಳನ್ನು ಪಡೆದು ಹಾನಿಯ ಪ್ರಮಾಣದ ಅನುಸಾರ ತಕ್ಷಣ ತಂತ್ರಾಂಶದಲ್ಲಿ ಮಾಹಿತಿ ನಮೂದಿಸಿ, ಅನುಮೋದನೆಗಾಗಿ ಪ್ರಸ್ತಾವ ಸಲ್ಲಿಸಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ನಷ್ಟದ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಬೆಳೆ ಹಾನಿಯ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ದಾಖಲಿಸಬೇಕು
ಎಂದರು.

ADVERTISEMENT

ಪರಿಹಾರ ನೀಡಲು ಸಂಬಂಧಿಸಿದ ಪರಿಹಾರ ತಂತ್ರಾಂಶದಲ್ಲಿ ನಮೂದಿಸಲು ನ. 30 ಕಡೆಯ ದಿನವಾಗಿದೆ. ಅಷ್ಟರಲ್ಲಿ ನಮೂದಿಸಬೇಕು. ಸಕಾಲದಲ್ಲಿ ನಮೂದಿಸದೆ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆಯಿಂದಾದ ಹಾನಿ ಪ್ರಕರಣಗಳ ಪರಿಸ್ಥಿತಿ ಬಗ್ಗೆ ಖುದ್ದು ಅವಲೋಕಿಸಬೇಕು ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.