ತುಮಕೂರು: ಸಂವಿಧಾನದ 370ನೇ ವಿಧಿ ರದ್ದು ಪಡಿಸಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸಿಪಿಐ ಮತ್ತು ಸಿಪಿಎಂ ಕಾರ್ಯಕರ್ತರು ಬುಧವಾರ ನಗರದ ಪ್ರತಿಭಟನೆ ನಡೆಸಿದರು.
370 ವಿಧಿ ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರದ ಸಂವಿಧಾನಿಕ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ. ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದೇ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವಾಗ ಅಲ್ಲಿನ ರಾಜಕೀಯ ನಾಯಕರನ್ನು ಬಂಧನದಲ್ಲಿರಿ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ನಡೆದುಕೊಂಡು ಸಂವಿಧಾನವನ್ನು ಉಲ್ಲಂಘಿಸಿದೆ. ರಾಜ್ಯಗಳಿಗೆ ಇದ್ದ ಸ್ವಾಯತ್ತತೆಯನ್ನು ಕಿತ್ತುಕೊಂಡಿದೆ. ಒಕ್ಕೂಟ ವ್ಯವಸ್ಥೆ ಉಳಿಯಬೇಕಾದರೆ ರಾಜ್ಯಗಳಿಗೆ ಇರುವ ಹಕ್ಕನ್ನು ಮೊಟಕುಗೊಳಿಸಬಾರದು ಎಂದು ಸಂಘಟನೆಗಳ ಮುಖಂಡರು ದೂರಿದರು.
ಕಾರ್ಮಿಕ ಮುಖಂಡ ಬಿ.ಉಮೇಶ್ ಮಾತನಾಡಿ, ‘ಜನರು ಬಿಜೆಪಿ ಮತ್ತು ಆರ್ಎಸ್ಎಸ್ ಅನುಸರಿಸುತ್ತಿರುವ ನೀತಿಗಳ ಕುರಿತು ಎಚ್ಚರಿಕೆ ವಹಿಸಬೇಕು. ಕೇಂದ್ರ ಸರ್ಕಾರ ಸ್ಥಳೀಯ ಜನಪತ್ರಿನಿಧಿಗಳು ಮತ್ತು ಜನರ ಅಭಿಪ್ರಾಯ ಸಂಗ್ರಹಿಸುವ ಗೋಜಿಗೆ ಹೋಗದೆ ಇಂತಹ ಕ್ರಮ ಕೈಗೊಂಡಿರುವುದು ಸಂವಿಧಾನಕ್ಕೆ ಅಪಚಾರ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಂಬೇಗೌಡ, ಸಿಪಿಐ ಮುಖಂಡ ಗಿರೀಶ್,ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ ಮಾತನಾಡಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಸಿಪಿಐ ಮುಖಂಡರಾದ ಅಶ್ವತ್ಥನಾರಾಯಣ, ಕಾಂತರಾಜು ನಾಗಮಣಿ, ಶಶಿಕಾಂತ್, ನಾಗಣ್ಣ ಮತ್ತು ಸಿಪಿಎಂ ಮುಖಂಡರಾದ ಲೋಕೇಶ್ ಮೇಳೆಕೋಟೆ ಶಂಕರಪ್ಪ, ಮುತ್ತುರಾಜು, ಇಬ್ರಾಹಿಂ, ಲಕ್ಷ್ಮೀಕಾಂತ್ ಗೋವಿಂದರಾಜು ಮೊದಲಾದವರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.