ತುಮಕೂರು: ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ ಆಧುನಿಕ ಕನ್ನಡ ಸಾಹಿತ್ಯದ ಪ್ರವರ್ತಕರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಅಭಿಪ್ರಾಯಪಟ್ಟರು.
ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಚ್.ಎಸ್.ವೆಂಕಟೇಶಮೂರ್ತಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.
ನವೋದಯ, ನವ್ಯ, ಪ್ರಗತಿಶೀಲ, ಬಂಡಾಯ, ದಲಿತ ಚಳವಳಿಗಳ ಮಧ್ಯೆ ಆಧುನಿಕ ಸಾಹಿತ್ಯ ಪ್ರಕಾರವು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪ್ರಮುಖವಾಗಿದೆ. ವೆಂಕಟೇಶಮೂರ್ತಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ವಿಮರ್ಶಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ ಆಧುನಿಕ ಕನ್ನಡ ಸಾಹಿತ್ಯದ ಪ್ರವರ್ತಕರೆನಿಸಿದ್ದಾರೆ ಎಂದು ನೆನಪಿಸಿಕೊಂಡರು.
ಶಿಕ್ಷಕರಾಗಿದ್ದುಕೊಂಡು, ಪ್ರವೃತ್ತಿಯಾಗಿ ಸಾಹಿತ್ಯ ಕ್ಷೇತ್ರವನ್ನು ಬೆಳೆಸಿದ್ದಾರೆ. ಕವಿತೆ, ಕಾದಂಬರಿ, ನಾಟಕ, ಚಲನಚಿತ್ರ ಗೀತೆಗಳನ್ನು ರಚಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್, ‘ಹಲವಾರು ಚಿತ್ರಗಳಿಗೆ ಗೀತೆ ರಚಿಸಿದ್ದು, ಚಿತ್ರ ಸಾಹಿತಿಯೂ ಎನಿಸಿಕೊಂಡಿದ್ದಾರೆ’ ಎಂದು ಹೇಳಿದರು.
ಇತಿಹಾಸ ಸಂಶೋಧಕ ಡಿ.ಎನ್.ಯೋಗೀಶ್ವರಪ್ಪ, ಸಾಹಿತ್ಯ ಪರಿಷತ್ತು ಪದಾಧಿಕಾರಿಗಳಾದ ಜಿ.ಎಚ್.ಮಹದೇವಪ್ಪ, ರಾಣಿ ಚಂದ್ರಶೇಖರ್, ಚಿಕ್ಕಬೆಳ್ಳಾವಿ ಶಿವಕುಮಾರ್, ನಟರಾಜ್, ಸಿರಿವರ ಶಿವರಾಮಯ್ಯ, ದಿಬ್ಬೂರು ಮಂಜು, ಹೆಬ್ಬಕ ಸತೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.