ತುಮಕೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಉಳಿವಿಗಾಗಿ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಜವಾಬ್ದಾರಿ. ಆದರೆ ಒಳಜಗಳಗಳಿಂದ ತೆರವಾದ ಮಂತ್ರಿ ಸ್ಥಾನವನ್ನು ಇಲ್ಲಿಯವರೆಗೆ ಭರ್ತಿ ಮಾಡದೇ ಈ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಗ್ರಹಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮಯ ಹತ್ತಿರವಿದ್ದರೂ ಸಹ ಇಲ್ಲಿಯವರೆಗೂ ಕಾಯಂ ನಿರ್ದೇಶಕರನ್ನು ನೇಮಕ ಮಾಡದೇ ಸರ್ಕಾರ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ ಎಂದರು.
ಸಿಐಡಿ ತಂಡ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣದಲ್ಲಿ ರಾಜ್ಯದ ಪ್ರತಿಷ್ಠಿತ 11 ಖಾಸಗಿ ಸಂಸ್ಥೆಗಳ ಹೆಸರನ್ನು ಉಲ್ಲೇಖಿಸಿದೆ. ಈ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆಯ ಕಾಲೇಜುಗಳ ಫಲಿತಾಂಶವನ್ನು ಶೇ 100 ಕ್ಕೆ ಹೆಚ್ಚಿಸಿಕೊಳ್ಳಲು ಮತ್ತು ಪ್ರಚಾರದ ಹುಚ್ಚಿನಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ನೇರವಾಗಿ ಭಾಗಿಯಾಗಿವೆ ಎಂದು ಸಿಐಡಿ ತಂಡ ಆರೋಪಿಸಿತ್ತು. ಆದರೆ ಈ ಕಾಲೇಜುಗಳ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಮುಖಂಡ ಅಪ್ಪು ಪಾಟೀಲ್ ನೇತೃತ್ವ ವಹಿಸಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.