ತುಮಕೂರು: ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ವೈಷಮ್ಯದ ಭಾವನೆಗಳನ್ನು ಬಿತ್ತುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಕೇಬಲ್ ಟಿ.ವಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಯಾವುದೇ ಕಾರ್ಯಕ್ರಮ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಅದರ ಪ್ರಸಾರ ನಿಷೇಧಿಸಬಹುದು ಎಂದರು.
ಸ್ಥಳೀಯ ಮಟ್ಟದಲ್ಲಿ ಕೇಬಲ್ ಚಾನೆಲ್ಗಳು ಪ್ರಸಾರ ಮಾಡುವ ವಿಷಯಗಳ ಬಗ್ಗೆ ಅಧಿಕೃತ ಅಧಿಕಾರಿಗಳು ನಿಗಾವಹಿಸಬೇಕು. ಪ್ರಸಾರವಾಗುವ ಕಾರ್ಯಕ್ರಮಗಳ ಕುರಿತು ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಅಥವಾ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಗೆ ದೂರು ನೀಡಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ, ವರದಕ್ಷಿಣೆ ವಿರೋಧಿ ವೇದಿಕೆ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಡಾ.ಟಿ.ಆರ್.ಲೀಲಾವತಿ, ಸಾಮಾಜಿಕ ಕಾರ್ಯಕರ್ತೆ ರೇಣುಕಾ ಪರಮೇಶ್, ಎಂಪ್ರೆಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.