ADVERTISEMENT

ಬಹಿರಂಗ ಪ್ರಚಾರ ನಡೆಸಿದರೆ ಕ್ರಮ: ತುಮಕೂರು ಜಿಲ್ಲಾಧಿಕಾರಿ

ತುಮಕೂರು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 2:47 IST
Last Updated 2 ನವೆಂಬರ್ 2020, 2:47 IST
ಡಾ.ಕೆ.ರಾಕೇಶ್‍ಕುಮಾರ್
ಡಾ.ಕೆ.ರಾಕೇಶ್‍ಕುಮಾರ್   

ತುಮಕೂರು: ಶಿರಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯವಾಗಿದೆ. ಯಾವುದೇ ರಾಜಕೀಯ ಪಕ್ಷಗಳು, ಉಮೇದುವಾರರು, ಕಾರ್ಯಕರ್ತರು ಅಥವಾ ಇತರರು ಬಹಿರಂಗ ಚುನಾವಣಾ ಪ್ರಚಾರ ನಡೆಸಕೂಡದು. ಬಹಿರಂಗ ಪ್ರಚಾರ ಕೈಗೊಂಡಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಎಚ್ಚರಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹೊರಗಿನ ಕಾರ್ಯಕರ್ತರು, ಮುಖಂಡರು ಕ್ಷೇತ್ರ ಬಿಡುವಂತೆ ಆದೇಶಿಸಲಾಗಿದೆ. ನ.3ರಂದು ಮತದಾನಕ್ಕೆ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನ.3ರ ಮಧ್ಯರಾತ್ರಿ 12ರವರೆಗೆ ಶಿರಾ ಕ್ಷೇತ್ರದಲ್ಲಿ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಆದೇಶವು ನವೆಂಬರ್ 3ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6
ಗಂಟೆಯವರೆಗೆ ನಡೆಯಲಿರುವ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು
ತಿಳಿಸಿದರು.

ಕೋವಿಡ್-19 ನೀತಿ ಸಂಹಿತೆ ಉಲ್ಲಂಘನೆ ಮಾಡಿದ 19 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಕೋವಿಡ್ ನಿಯಮಾವಳಿಯನ್ನು ಉಲ್ಲಂಘಿಸಿವೆ. ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ನಂತರ ಮತದಾರರಿಗೆ ಒಂದು ಕೈಗವಸು ನೀಡಲಾಗುವುದು. ಕೋವಿಡ್ ಸೋಂಕಿತರು/ಶಂಕಿತರ ಮತದಾನಕ್ಕಾಗಿ ಮತದಾನದ ಅವಧಿಯ ಕೊನೆಯ 1 ಗಂಟೆ ಮೀಸಲಿಡಲಾಗಿದೆ. ಇದಕ್ಕಾಗಿ ಮತಗಟ್ಟೆಯ ಸಿಬ್ಬಂದಿಗಳಿಗೆ ಪಿ.ಪಿ ಕಿಟ್‍ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಮತದಾನದ ನಂತರ ಮತ ಯಂತ್ರಗಳನ್ನು ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಥಾಪಿಸಿರುವ ಎಣಿಕಾ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದರು. ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಕಾರಣ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಅಧಿಕಾರಿ, ಸಿಬ್ಬಂದಿ ಹಾಗೂ ತಾಲ್ಲೂಕಿನ ಶೇ 20ರಷ್ಟು ಮಂದಿಗೆ ನ.4ರ ನಂತರ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಚುನಾವಣಾ ಶಾಖೆಯ ಸಿಬ್ಬಂದಿ ನಾಗಭೂಷಣ್‌, ಮಂಜುನಾಥ್ ಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.